ಮಂಗಳೂರು, ಜು 22 (DaijiworldNews/MS): ಮನೆಯಲ್ಲಿ ಯೋಗಾಭ್ಯಾಸದ ವೇಳೆ ಬಿದ್ದು ತಲೆಗೆ ಏಟಾಗಿ ನಗರ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡಿಸ್ (೮೦) ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಮಿದುಳಿನಲ್ಲಿ ರಕ್ತಸ್ರಾವವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅವರ ಆರೋಗ್ಯ ಯಥಾಸ್ಥಿತಿಯಲ್ಲಿದ್ದು, ನುರಿತ ವೈದ್ಯರ ತಂಡ ನಿಗಾ ವಹಿಸಿದೆ. ಆಸ್ಕರ್ ಫರ್ನಾಂಡಿಸ್ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಮಣಿಪಾಲ ಕೆಎಂಸಿ ವೈದ್ಯರು ಸೇರಿದಂತೆ ತಜ್ಞರಿಂದ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಸೋನಿಯಾ ಗಾಂಧಿ, ರಾಹುಲ್, ಪ್ರಿಯಾಂಕಾ ಅವರೂ ಆಸ್ಕರ್ ಕುಟುಂಬ ಸದಸ್ಯರ ಜೊತೆ ಚರ್ಚಿಸಿದ್ದಾರೆ. ಇವರಲ್ಲದೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ವಿವಿಧ ಪಕ್ಷಗಳ ನಾಯಕರು , ಮುಖಂಡರು ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ.
ಅಲ್ಲದೆ ಪೇಜಾವರ ಸ್ವಾಮೀಜಿ ಕೂಡ ಆರೋಗ್ಯ ವಿಚಾರಿಸಿದ್ದಾರೆ. ಇದರೊಂದಿಗೆ ಅನೇಕರು ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಆಸ್ಕರ್ ಆರೋಗ್ಯ ವಿಚಾರಿಸುತ್ತಿದ್ದಾರೆ.