ಮಂಗಳೂರು, ಜು.26 (DaijiworldNews/HR): ಆದಾಯಕ್ಕಿಂತ ಹೆಚ್ಚಿನ ಆಸ್ತಿಗೆ ಸಂಬಂಧಿಸಿದಂತೆ ಮಂಗಳೂರು ಮಹಾನಗರ ಪಾಲಿಕೆಯ ಸಹಾಯಕ ಟೌನ್ ಪ್ಲಾನಿಂಗ್ ಆಫೀಸರ್ ಬಿ.ಪಿ. ಶಿವರಾಜುಗೆ 5 ವರ್ಷ ಶಿಕ್ಷೆ ಮತ್ತು ರೂ. 34,00,000 ದಂಡ. ವಿಧಿಸಲಾಗಿದೆ.
ಜುಲೈ 25ರಂದು ಮಂಗಳೂರು ಮಹಾನಗರ ಪಾಲಿಕೆಯ ಸಹಾಯಕ ಟೌನ್ ಪ್ಲಾನಿಂಗ್ ಆಫೀಸರ್ ಬಿ.ಪಿ. ಶಿವರಾಜು ರವರು ತಮ್ಮ ಸೇವಾ ಅವಧಿಯಲ್ಲಿ ನಿಗದಿತ ಆದಾಯಕ್ಕಿಂತಲೂ ಮೀರಿ ಹೆಚ್ಛಿನ ಆಸ್ತಿಗಳನ್ನು ಹೊಂದಿದ್ದಾರೆಂದು ಆಗಿನ ಲೋಕಾಯುಕ್ತ ಇನ್ಸ್ಪೆಕ್ಟರ್ ಪ್ರಸನ್ನ ವಿ. ರಾಜು ಮಾಹಿತಿ ಕಲೆ ಹಾಕಿದ್ದು, ಆಗಿನ ಲೋಕಾಯುಕ್ತ ಉಪಾಧೀಕ್ಷಕರು ಮತ್ತು ಅವರ ತಂಡ ಕೇಸು ದಾಖಲಿಸಿ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಸುಮಾರು ಮೂವತ್ತೆಂಟು ಲಕ್ಷದಷ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪತ್ತೆಯಾದ ಬಗ್ಗೆ ವರದಿಯಾಗಿತ್ತು. ತನಿಖೆಯನ್ನು ಪೂರ್ಣಗೊಳಿಸಿ ಡಿ.ವೈ. ಎಸ್.ಪಿ. ಆಗಿದ್ದ ಡಾ. ಪ್ರಭುದೇವ್ ಮಾಣೆ ರವರು ಆರೋಪಿ ಶಿವರಾಜು ವಿರುದ್ದ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಅಭಿಯೋಜನೆಯ ಪರವಾಗಿ 27 ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು ಹಾಗೂ 160 ದಾಖಲೆಗಳನ್ನು ಹಾಜರು ಪಡಿಸಲಾಗಿತ್ತು.
ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್. ಎನ್. ರಾಜೇಶ್ ರವರ ವಾದವನ್ನು ಪುರಸ್ಕರಿಸಿ, ಆರೋಪಿಯ ಮೇಲಿನ ಆರೋಪ ಸಾಭೀತಾಗಿದೆ ಎಂದು ತೀರ್ಮಾನಕ್ಕೆ ಬಂದಿದ್ದು, ಹದಿನೇಳು ಲಕ್ಷದಷ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಸೇವೆಗೆ ಸೇರಿದ ವರ್ಷದಿಂದ ದಾಳಿ ನಡೆದ ದಿನಾಂಕದ ವರೆಗೆ ಆರೋಪಿ ಹೊಂದಿದ್ದಎಂದು ಮಾನ್ಯ ನ್ಯಾಯಾಲಯದಲ್ಲಿ ಸಾಭೀತಾದ ಹಿನ್ನಲೆಯಲ್ಲಿ ಮಾನ್ಯ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ ಶಿಕ್ಷೆ ವಿಧಿಸಿದೆ. ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ. ಬಿ. ಜಕಾತಿ ರವರು ಇಂದು ಶಿಕ್ಷೆ ಪ್ರಕಟಿಸಿದ್ದಾರೆ.
ನ್ಯಾಯಾಧೀಶ ರಿಂದ 106 ಪುಟಗಳ ಸುದೀರ್ಘ ಆದೇಶ ಹೊರಬಂದಿದೆ. ಭ್ರಷ್ಟಾಚಾರ ನಿಗ್ರಹ ಖಾಯಿದೆಯ ಕಲಂ 13 (1) (ಇ) ರ ಜೊತೆಗೆ 13(2) ರ ಅಡಿ ಯಲ್ಲಿ ಆರೋಪಿ ಶಿವರಾಜು ಅಪರಾಧ ಎಸಗಿದ್ದಾರೆಂದು ಸಾಭೀತಾಗಿದೆ.
ಆರೋಪಿಯು ಅಸೌಖ್ಯದ ಕಾರಣ ನೀಡಿ ಶಿಕ್ಷೆ ಪ್ರಮಾಣ ಕಡಿಮೆ ಮಾಡಬೇಕೆಂದು ನ್ಯಾಯಾಲಯದಲ್ಲಿ ಬೇಡಿಕೆ ಸಲ್ಲಿಸಿದ್ದನು. ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ಪ್ರಬಲ ವಾದ ಮಂಡಿಸಿ ಭ್ರಷ್ಟಾಚಾರ ಪ್ರಕರವಾದ್ದರಿಂದ ಗರಿಷ್ಟ ಶಿಕ್ಷೆ ವಿಧಿಸಬೇಕೆಂದು ನ್ಯಾಯಾಲಯವನ್ನು ಕೋರಿದರು.
ಶಿಕ್ಷೆಯ ಪ್ರಮಾಣ ಪ್ರಕಟಿಸಿದ ಮಾನ್ಯ ನ್ಯಾಯಾಧೀಶ ಬಿ.ಬಿ.ಜಕಾತಿ ಯವರು ಆಪರಾಧಿಗೆ 5 ವರ್ಷ ಸಾದಾ ಸಜೆ ಮತ್ತು ರೂ 34,00,000 ದಂಡ, ದಂಡ ತೆರಲು ತಪ್ಪಿದಲ್ಲಿ ಒಂದು ವರ್ಷ ಸಾದಾ ಸಜೆ ವಿಧಿಸಿದರು.
ನ್ಯಾಯಾಧೀಶ ಬಿ.ಬಿ. ಜಕಾತಿ ಯವರು ತಮ್ಮ ಆದೇಶದಲ್ಲಿ ಭ್ರಷ್ಟಾಚಾರ ಎಂಬುದು ಸಮಾಜದಲ್ಲಿ ಕೇನ್ಸರ್ ಪಿಡುಗಿನಂತೆ ಆಗಿದ್ದು ಅಪರಾಧಿಗೆ ಯಾವುದೇ ರಿಯಾಯಿತಿ ನೀಡುವುದು ಸರಿಯಲ್ಲ ಮತ್ತು ಕಳೆದ ಹದಿನಾಲ್ಕು ವರ್ಷಗಳಿಂದ ಅಕ್ರಮ ಆಸ್ಥಿ ರೂ. 17,00,000ವನ್ನು ಅಪರಾಧಿ ಬಿ. ಪಿ. ಶಿವರಾಜು ಅನುಭವಿಸಿರುವುದರಿಂದ ಎರಡುಪಟ್ಟು ದಂಡ ವಿಧಿಸುವುದು ಸೂಕ್ತ ಎಂದು ರೂ. 34,00,000ದಂಡ ಪಾವತಿಸಲು ಆದೇಶಿಸಿದರು.
ಇನ್ನು ಆಪರಾಧಿಯನ್ನು ನ್ಯಾಯಾಂಗ ಬಂದನಕ್ಕೆ ಒಪ್ಪಿಸಲಾಗಿದ್ದು, ಮಂಗಳೂರು ಲೋಕಾಯುಕ್ತ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ, ನ್ಯಾಯವಾದಿ ಕೆ.ಎಸ್.ಎನ್. ರಾಜೇಶ್ ವಾದಿಸಿದ್ದರು.