ಉಡುಪಿ, ಜು 27 (DaijiworldNews/MS): ಕೋವಿಡ್-19 ಸೋಂಕನ್ನು ನಿಯಂತ್ರಿಸಲು ಹಾಗೂ ಸೋಂಕಿನ ಸರಪಳಿಯನ್ನು ಮುರಿಯಲು ಸರ್ಕಾರದ ನಿರ್ದೇಶನದಂತೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪರಿಣಾಮಕಾರಿ ಅನುಷ್ಟಾನದಿಂದಾಗಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿರುತ್ತದೆ.
ರಾಜ್ಯ ಸರ್ಕಾರದ ಆದೇಶದಂತೆ ಈ ಕೆಳಕಂಡ ಅಂಶಗಳನ್ನು ಸೇರ್ಪಡೆ ಮಾಡುವುದು ಸಾರ್ವಜನಿಕ ಹಿತದೃಷ್ಟಿಯಿಂದ ಅತಿ ಅವಶ್ಯವೆಂದು ಕಂಡುಬಂದಿರುವ ನಿಟ್ಟಿನಲ್ಲಿ ಸಿ.ಆರ್.ಪಿ.ಸಿ ಸೆಕ್ಷನ್ 144(3) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಈ ಕೆಳಕಂಡಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.
ಜಿಲ್ಲೆಯ ಧಾರ್ಮಿಕ ಸ್ಥಳಗಳ ಕಾರ್ಯಚಟುವಟಿಕೆಗೆ ಸಂಬಂಧಿಸಿದಂತೆ ಪೂಜಾ ಸ್ಥಳಗಳಾದ ದೇವಾಲಯಗಳು, ಮಸೀದಿಗಳು, ಚರ್ಚುಗಳು, ಗುರುದ್ವಾರಗಳು ಮತ್ತು ಇತರ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅನುಮತಿ ನೀಡಲಾಗಿದ್ದು, ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲಿಸುವುದರೊಂದಿಗೆ ಮತ್ತು ಸಂಬಂಧಪಟ್ಟ ಇಲಾಖೆಯಿಂದ ಹೊರಡಿಸಲಾದ ಎಸ್.ಓ.ಪಿ ಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ಜುಲೈ 25 ರಿಂದ ಪೂಜಾ ಸ್ಥಳಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ನಡೆಸಲು ಅನುಮತಿ ನೀಡಲಾಗಿದೆ. ಈ ಪೈಕಿ ಜಾತ್ರೆಗಳು, ದೇವಾಲಯ ಉತ್ಸವಗಳು, ಮೆರವಣಿಗೆಗಳು ಮತ್ತು ಸಭೆಗಳನ್ನು ನಡೆಸಲು ಅನುಮತಿ ಇರುವುದಿಲ್ಲ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹೊರಡಿಸಲಾದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಅಮ್ಯೂಸ್ಮೆಂಟ್ ಪಾರ್ಕ್ ಮತ್ತು ಅಂತಹ ಇತರ ಸ್ಥಳಗಳನ್ನು ತೆರೆಯಲು ಅನುಮತಿ ನೀಡಲಾಗಿದ್ದು, ಈ ಪೈಕಿ ಜಲಕ್ರೀಡೆ, ಜಲ ಸಂಬಂಧಿತ ಸಾಹಸ ಚಟುವಟಿಕೆಗಳಿಗೆ ಅನುಮತಿ ಇರುವುದಿಲ್ಲ.
ಮೇಲಿನ ಆದೇಶಗಳನ್ನು ಪಾಲಿಸದೇ ಇರುವವರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು, ಡಿಸಾಸ್ಟರ್ ಮ್ಯಾನೆಜ್ಮೆಂಟ್ ಆ್ಯಕ್ಟ್ 2005, ಕರ್ನಾಟಕ ಎಪಿಡೆಮಿಕ್ ಡಿಸೀಸಸ್ ಆ್ಯಕ್ಟ್ 2020 ಮತ್ತು ಐ.ಪಿ.ಸಿ ಸೆಕ್ಷನ್ 188 ಪ್ರಕಾರ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ.