ಮಂಗಳೂರು, ಅ 01 (DaijiworldNews/MS): ದ.ಕ ಜಿಲ್ಲೆಯಲ್ಲಿ ಕೊರೊನಾ ಆತಂಕ ಮತ್ತೆ ಹೆಚ್ಚಾಗುತ್ತಿದ್ದು, ನಿಯಂತ್ರಣ ಜಿಲ್ಲಾಡಳಿತಕ್ಕೆ ಸವಾಲಾಗಿದೆ. ರಾಜ್ಯದ ಇತರ ಜಿಲ್ಲೆಯಲ್ಲಿ ಕೊರೊನಾ ಕಡಿಮೆಯಾಗುತ್ತಿದ್ದರೆ , ದ.ಕ. ಜಿಲ್ಲೆಯಲ್ಲಿ ಮಾತ್ರ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಭಾನುವಾರ 410 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಈ ನಡುವೆ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಖಚಿತ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದೆ. ಹೀಗಾಗಿ ಈ ಹಂತದಲ್ಲಿಯೇ ಕಟ್ಟುನಿಟ್ಟಿನ ಕ್ರಮಗಳನ್ನು ಅನುಷ್ಠಾನಗೊಳಿಸಿ, ಸಂಭಾವ್ಯ ಕೋವಿಡ್ 3ನೇ ಅಲೆಯ ಭೀತಿಯನ್ನು ತಪ್ಪಿಸಲು ನಗರವ್ಯಾಪ್ತಿಯಲ್ಲಿ ಸಮುಚಿತ ವರ್ತನೆ ಪಾಲನೆಯಾಗುತ್ತಿರುವುದರ ಬಗ್ಗೆ ನಿಗಾವಹಿಸುವುದು ಅನಿವಾರ್ಯವಾಗಿರುವುದರಿಂದ ಪಾಲಿಕೆಯ ಅಧಿಕಾರಿ/ಸಿಬ್ಬಂದಿಗಳು ಫೀಲ್ಡಿಗಿಳಿದಿದ್ದಾರೆ.
ಈ ಹಿನ್ನೆಲೆಯಲ್ಲಿ ಆ.1 ರಂದು ಪಾಲಿಕೆಯ ಅಧಿಕಾರಿ/ಸಿಬ್ಬಂದಿಗಳು ವಿವಿಧ ಕಡೆಗಳಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಮಾಲ್ಗಳು, ಶಾಪಿಂಗ್ ಕಾಂಪ್ಲೆಕ್ಸ್, ಹೋಟೆಲ್, ಸೂಪರ್ ಮಾರ್ಕೆಟ್, ಮಾರುಕಟ್ಟೆ ಇನ್ನಿತರ ಜನನಿಬಿಡ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. , ಮಾಸ್ಕ್ ಧರಿಸದೇ ಇರುವ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳದ ಒಟ್ಟು 25 ಪ್ರಕರಣಗಳು ಕಂಡು ಬಂದಿದ್ದು, ರೂ. 12,400 ದಂಡವನ್ನು ವಿಧಿಸಿ ಎಚ್ಚರಿಕೆ ನೀಡಲಾಗಿದೆ. ಹಾಗೂ ಸಂಭಾವ್ಯ ಕೋವಿಡ್ 3ನೇ ಅಲೆಯನ್ನು ತಪ್ಪಿಸಲು ಸದ್ರಿ ಕಾರ್ಯಾಚರಣೆಯನ್ನು ಇನ್ನು ಮುಂದಕ್ಕೂ ಜನನಿಬಿಡ ಪ್ರದೇಶಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ.