ಮಂಗಳೂರು, ಆ 03 (DaijiworldNews/MS): ಮುಖ್ಯಮಂತ್ರಿ ಬೊಮ್ಮಾಯಿ ಸಚಿವ ಸಂಪುಟ ರಚನೆ ಕಗ್ಗಂಟಾಗಿಯೇ ಉಳಿದಿದೆ. ಒಂದು ಕಡೆ ಬೊಮ್ಮಾಯಿ ಅವರು ದಿಲ್ಲಿಯಲ್ಲಿ ಸಂಭಾವ್ಯರ ಪಟ್ಟಿ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ. ಇನ್ನೊಂದು ಕಡೆ ಬೆಂಗಳೂರಿನಲ್ಲಿ ಯಡಿಯೂರಪ್ಪ ಅವರ ನಿವಾಸ ಮತ್ತು ದಿಲ್ಲಿಯಲ್ಲಿ ವರಿಷ್ಟರ ನಿವಾಸಗಳು ಆಕಾಂಕ್ಷಿಗಳು ಪಾಲಿಗೆ ಶಕ್ತಿ ಕೇಂದ್ರಗಳಾಗಿ ಬದಲಾಗಿದೆ.
ಇನ್ನೊಂದೆಡೆ ಸಚಿವ ಸ್ಥಾನಕ್ಕಾಗಿ ಲಾಭಿ ನಡೆಯುತ್ತಿದ್ದರೆ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ತವರಾದ ಕರಾವಳಿಯಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಪೈಪೋಟಿ ನಡೆಸುತ್ತಿರುವುದು ಕಾಣುತ್ತಿಲ್ಲ.
ಜಿಲ್ಲೆಯಲ್ಲಿ 8 ಕ್ಷೇತ್ರಗಳ ಪೈಕಿ ಏಳರಲ್ಲಿ ಬಿಜೆಪಿ ಶಾಸಕರಿದ್ದು, ಎಸ್. ಅಂಗಾರ ಅವರನ್ನು ಹೊರತುಪಡಿಸಿ ಉಳಿದೆಲ್ಲ ಶಾಸಕರು ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ. ಹೀಗಾಗಿ ಯಾವೊಬ್ಬ ಶಾಸಕರೂ ಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆಸಿಲ್ಲ. ಬಿ.ಎಸ್. ಯಡಿಯೂರಪ್ಪ ಅವರ ಅವಧಿಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ತಲಾ ಒಂದು ಸಚಿವ ಸ್ಥಾನ ದೊರಕಿತ್ತು. ಈ ಪೈಕಿ ಕೋಟ ಶ್ರೀನಿವಾಸ ಪೂಜಾರಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರೆ, ಎಸ್. ಅಂಗಾರ, ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಆಯ್ಕೆಗೆ ಹೆಚ್ಚು ಒತ್ತು ನೀಡುವ ಸಾಧ್ಯತೆಯಿದೆ. ಕೋಟ ಶ್ರೀನಿವಾಸ ಪೂಜಾರಿ ಮತ್ತು ಎಸ್.ಕೆ. ಅಂಗಾರ ಸಂಘಪರಿವಾರದ ಹಿನ್ನೆಲೆಯಿಂದ ಬಂದವರಾಗಿರುವ ಕಾರಣ ಈ ಇಬ್ಬರು ನಾಯಕರಿಗೆ ಮಂತ್ರಿ ಸ್ಥಾನ ನೀಡಲು ಹೆಚ್ಚಿನ ವಿರೋಧವಿಲ್ಲದಿರುವುದು ಅವರ ದಾರಿ ಸುಗಮ ಮಾಡಿಕೊಟ್ಟಿದೆ ಎಂಬ ಮಾತು ಕೇಳಿಬರುತ್ತಿದೆ.