ಮಂಗಳೂರು, ಆ. 05 (DaijiworldNews/SM): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಭ್ರಷ್ಟಾಚಾರ ರಹಿತ ಹಾಗೂ ಪಾರದರ್ಶಕ ಆಡಳಿತ ನೀಡುವ ನಿಟ್ಟಿನಲ್ಲಿ ವಾರ್ಡ್ ಕಮಿಟಿಗಳನ್ನು ರಚಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಎಲ್ಲರ ಹೆಸರುಗಳು ಹಾಗೂ ವಿವರಗಳನ್ನು ಶೀಘ್ರವೇ ಪಾಲಿಕೆ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದೆಂದು ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ದೈಜಿವರ್ಲ್ಡ್ ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಈಗಾಗಲೇ ನನ್ನ ಗಮನಕ್ಕೆ ಈ ವಿಚಾರವನ್ನು ಕೆಲವರು ತಂದಿದ್ದಾರೆ. ಪಾರದರ್ಶಕ ಆಡಳಿತ ನೀಡುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಯಾವುದೇ ಗೊಂದಲಗಳಿಲ್ಲದೆ, ವಾರ್ಡ್ ಕಮಿಟಿ ರಚಿಸುವುದು ನಮ್ಮ ಉದ್ದೇಶವಾಗಿದೆ. ವಾರ್ಡ್ ಸಮಿತಿ ಸದಸ್ಯರಾಗುವವರು ಯಾವುದೇ ರಾಜಕೀಯ ಪಕ್ಷದ ಕಾರ್ಯಕರ್ತರಾಗಿರಬಾರದು. ಹಾಗೂ ಅವರ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳಿರಬಾರದು.
ಒಂದೊಮ್ಮೆ ಅಂತಹ ವ್ಯಕ್ತಿಗಳಿದ್ದಲ್ಲಿ ಅವರ ವಿರುದ್ಧ ಆಕ್ಷೇಪ ಸಲ್ಲಿಸಲು ಅವಕಾಶವಿದೆ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಮಿಷನರ್ ಪ್ರತಿಕ್ರಿಯೆ ನೀಡಿದ್ದಾರೆ.