ಕುಂದಾಪುರ,ಆ.10(DaijiworldNews/HR): ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳವಾರ ಆನೆಗುಡ್ಡೆ ಶ್ರೀವಿನಾಯಕ ದೇವಳಕ್ಕೆ ಪತ್ನಿ ಹಾಗೂ ಪುತ್ರಿಯೊಂದಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಬಳಿಕ ಕುಂದಾಪುರ ಬಿಜೆಪಿ ಕಚೇರಿಗೆ ಆಗಮಿಸಿ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, "ಸಾಮಾನ್ಯನಾಗಿದ್ದ ನನಗೆ ಸಮಾಜ ಕಲ್ಯಾಣದಂತಾ ದೊಡ್ಡ ಜವಾಬ್ದಾರಿ ನೀಡುರುವುದು ಬಿಜೆಪಿಯಲ್ಲಿ ಮಾತ್ರ ಕಾಣಲು ಸಾಧ್ಯ. ನನ್ನ ಮೇಲೆ ಪಕ್ಷದ ನಾಯಕರು ಇಟ್ಟಿರುವ ಭರವಸೆಗೆ ಹುಸಿಯಾಗದ ರೀತಿಯಲ್ಲಿ ಕರ್ತವ್ಯ ನಿಭಾಯಿಸುವ ಮೂಲಕ ಸಮಾಜಕ ನ್ಯಾಯ ಕೊಡಿಸುವ ಎಲ್ಲಾ ಪ್ರಯತ್ನ ಮಾಡುತ್ತೇನೆ" ಎಂದು ಭರವಸೆ ನೀಡಿದರು.
"ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಕೆಲವು ಸುಳ್ಳು ಕೇಸ್ ಗಳನ್ನು ಹಿಂದಿನ ಸರಕಾರದ ಅವಧಿಯಲ್ಲಿ ದಾಖಲಿಸಲಾಗಿತ್ತು. ಆ ಸುಳ್ಳು ಕೇಸುಗಳನ್ನು ವಾಪಾಸ್ ಪಡೆಯುವಂತೆ ಹಿಂದೂಸಂಘಟಮೆ ಕಾರ್ಯಕರ್ತರು ನೀಡಿದ ಮನವಿ ಆಧಾರದಲ್ಲಿ ಗೃಹಮಂತ್ರಿ ಆರಗ ಜ್ಞಾನೇಂದ್ರ ಅವರಿಗೆ ಮನವಿ ಮಾಡಿದ್ದೇನೆ. ಇದಕ್ಕೆ ಸ್ಪಂದಿಸಿದ ಅವರು ರಾಜ್ಯದ ಎಲ್ಲಾ ಕಡತಗಳನ್ನು ತರಿಸಿಕೊಂಡು ಕೂಲಂಕುಷವಾಗಿ ಪರಿಶೀಲಿಸಿ ಸುಳ್ಳುಪ್ರಕರಣಗಳನ್ನು ವಾಪಾಸ್ ಪಡೆಯುವ ವಿಶ್ವಾಸದ ಮಾತುಗಳನ್ನು ಗೃಹ ಸಚಿವರು ತಿಳಿಸಿದ್ದಾರೆ" ಎಂದರು.
ಕುಂದಾಪುರ ಮಂಡಲ ಬಿಜೆಪಿ ಅಧ್ಯಕ್ಷ ಶಂಕರ ಅಂಕದಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಮಂಡಳಿ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಕುಂದಾಪುರ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್, ಉಪಾಧ್ಯಕ್ಷ ಸಂದೀಪ ಖಾರ್ವಿ, ನಗರ ಪ್ರಾಧಿಕಾರ ಅಧ್ಯಕ್ಷ ವಿಜಯ ಎಸ್.ಪೂಜಾರಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಿಶೋರ್ ಕುಮಾರ್ ಬಿ, ದ.ಕ ಬಿಜೆಪಿ ಸಹಾಯಕ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಮೀನುಗಾರಿಕಾ ಪ್ರಕೋಷ್ಠ ಜಿಲ್ಲಾಧ್ಯಕ್ಷ ಸದಾನಂದ ಬಳ್ಕೂರು, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಗೋಪಾಲ ಕಳಂಜೆ, ಒಬಿಸಿ ಪ್ರಧಾನ ಕಾರ್ಯದರ್ಶಿ ವಿಠಲ ಪೂಜಾರಿ, ಮಾಜಿ ಜಿಪಂ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ ಇದ್ದರು. ಮಹಿಳಾಮೋರ್ಚಾ ಹಾಗೂ ವಿವಿಧ ಜನಪ್ರತಿನಿಧಿಗಳು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಅಭಿನಂದಿಸಿದರು.
ಇನ್ನು ಪರಿಶಿಷ್ಟ ಜಾತಿಯ ಬಡ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು 5 ಲಕ್ಷಕ್ಕೆ ಹೆಚ್ಚಿಸಲು ಮುಂದಾಗಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ಕೆ ಉತ್ತಮ ಅಭಿಪ್ರಾಯ ವ್ಯಕ್ತವಾಯಿತು.
ಸಚಿವರಾದ ಬಳಿಕ ಕುಂದಾಪುರಕ್ಕೆ ಮಂಗಳವಾರ ಸಚಿವರು ಆಗಮಿಸಿದ್ದು ಕುಂದಾಪುರ ಶಾಸ್ತ್ರಿ ವೃತ್ತದಲ್ಲಿ ಸಚಿವರಿಗೆ ಸ್ವಾಗತ ಕೋರಲಾಯಿತು. ಉಡುಪಿ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಗೋಪಾಲ ಕಳಿಂಜೆ ನೇತೃತ್ವದಲ್ಲಿ ಸಚಿವರನ್ನು ಅಭಿನಂದಿಸಲಾಯಿತು. ಈ ಸಂದರ್ಭ ಎಸ್ಸಿ ಮೋರ್ಚಾ ಪ್ರಧಾನಕಾರ್ಯದರ್ಶಿ ಕೃಷ್ಣಮೂರ್ತಿ ಡಿ.ಬಿ., ಪುರಸಭಾ ಸದಸ್ಯರು ಪ್ರಭಾಕರ್ ವಿ. ಮೊದಲಾದವರಿದ್ದರು.
ಬಳಿಕ ಮಾತನಾಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸೋಮವಾರದಂದು ವಿಕಾಸಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದು ಪರಿಶಿಷ್ಟ ಜಾತಿಯ ಪ್ರತಿ ಕುಟುಂಬಗಳ ಮನೆ ನಿರ್ಮಾಣಕ್ಕೆ 1 ಲಕ್ಷ 70 ಸಾವಿರ ನೆರವು ನೀಡಲಾಗುತ್ತಿದೆ. ಈ ಮೊತ್ತದಿಂದ ಒಳ್ಳೆಯ ಮನೆ ನಿರ್ಮಿಸಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿ ಫಲಾನುಭವಿಗೆ 5 ಲಕ್ಷ ಅನುದಾನ ನೀಡಲು ಅನುಮತಿ ಕೋರಿ ಮುಖ್ಯಮಂತ್ರಿಯವರಿಗೆ ಪ್ರಸ್ತಾವ ಸಲ್ಲಿಸಲಾಗುವುದು ಎಂದರು.
ರಾಜ್ಯದಲ್ಲಿ 17 ಸಾವಿರ ಕೋಟಿ ಬೃಹತ್ ಮೊತ್ತವಿರುವ ಇಲಾಖೆ ಸಮಾಜ ಕಲ್ಯಾಣ ಇಲಾಖೆಯದ್ದಾಗಿದ್ದು 25 ಲಕ್ಷ ಪರಿಶಿಷ್ಟ ಜಾತಿ ಕುಟುಂಬಗಳಿದೆ. ಆ ಕುಟುಂಬಗಳ ಸರ್ವೇ ನಡೆಸಿ ಮನೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಒಂದು ವರ್ಷ ಕಾಲ ಸಮಾಜ ಕಲ್ಯಾಣ ಇಲಾಖೆಯಲ್ಲಿ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಲಾಗುವುದು. ಅನಿವಾರ್ಯ ಅಲ್ಲದ ಯೋಜನೆಗಳನ್ನು ತಡೆ ಹಿಡಿಯಲಾಗುವುದು. ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಉತ್ತಮವಾದ ಮನೆ, ಶೌಚಾಲಯ, ಶುದ್ಧ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಗುಣಮಟ್ಟದ ಆರೋಗ್ಯ ಸೌಲಭ್ಯ ಮತ್ತು ಅವರ ಮಕ್ಕಳಿಗೆ ಉತ್ತಮವಾದ ಶಿಕ್ಷಣ, ಹಕ್ಕುಪತ್ರ ನೀಡಿ ಸಮಾಜವನ್ನು ಮುಖ್ಯವಾಹಿನಿಗೆ ತರಲು ಆದ್ಯತೆ ನೀಡಲಾಗುವುದು. ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಂಪೂರ್ಣವಾಗಿ ಪಾರದರ್ಶಕತೆ ತರಲಾಗುವುದು ಎಂದು ಸಚಿವರು ತಿಳಿಸಿದರು.