ಕಾಸರಗೋಡು, ಆ 15 (DaijiworldNews/HR): ದೇಶದ ಪ್ರಜಾಪ್ರಭುತ್ವ-ಜಾತ್ಯತೀತ ಮೌಲ್ಯಗಳನ್ನು ಉಳಿಸಿಕೊಳ್ಳಲು ಇಂದಿನ ತಲೆಮಾರು ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಬಂದರು ಸಚಿವ ಅಹಮ್ಮದ್ ದೇವರ್ ಕೋವಿಲ್ ಅಭಿಪ್ರಾಯಪಟ್ಟರು.
75 ನೇ ಸ್ವಾತಂತ್ರೋತ್ಸವದ ಅಂಗವಾಗಿ ವಿದ್ಯಾನಗರ ನಗರಸಭಾ ಸ್ಟೇಡಿಯಂನಲ್ಲಿ ಧ್ವಜಾರೋಹಣ ನೆರೆವೇರಿಸಿದ ಬಳಿಕ ಮಾತನಾಡಿದ ಅವರು, "ಒಂದು ತಲೆಮಾರು ಹೋರಾಡಿ ಸ್ವಾತಂತ್ರ್ಯವನ್ನು ತಂದುಕೊಟ್ಟರು. ಆದರೆ ಈ ಮೌಲ್ಯಗಳನ್ನು ಕಾಪಾಡಬೇಕಿದೆ. ಸ್ವಾತಂತ್ರ್ಯದ ಬಳಿಕ ದೇಶವು ಹಲವು ಸವಾಲುಗಳನ್ನು ಎದುರಿಸಿಕೊಂಡು ಬಂದಿದೆ. ದೇಶದ ಐಕ್ಯತೆ, ಅಖಂಡತೆಯನ್ನು ಉಳಿಸಬೇಕಿದೆ" ಎಂದು ಅಭಿಪ್ರಾಯ ಪಟ್ಟರು.
ಕೊರೊನಾ ಮಾನದಂಡದಂತೆ ನಡೆದ ಕಾರ್ಯಕ್ರಮದಲ್ಲಿ ಆಹ್ವಾನಿತ ನೂರು ಮಂದಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ ನೀಡಲಾಯಿತು.
ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಬಿ ರಾಜೀವ್, ಸಂಸದ ರಾಜ್ ಮೋಹನ್ ಉಣ್ಣಿ ತ್ತಾನ್, ಶಾಸಕರಾದ ಎ.ಕೆ.ಎಂ ಅಶ್ರಫ್, ಎನ್. ಎ ನೆಲ್ಲಿಕುನ್ನು, ಎಂ. ರಾಜಗೋಪಾಲ್, ಸಿ.ಎಚ್ ಕುಞ೦ಬು, ಇ. ಚಂದ್ರಶೇಖರನ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಹಾಗೂ ಇನ್ನಿತರ ಜನಪ್ರತಿನಿಧಿಗಳು, ಅಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.