ಮಂಗಳೂರು, ಆ 16 (DaijiworldNews/PY): ಜವಾಹರ್ಲಾಲ್ ನೆಹರೂ ಅವರನ್ನು ಟೀಕಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ರಮಾನಾಥ್ ರೈ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರನ್ನು "ದೇಶದ್ರೋಹಿ" ಎಂದು ಕರೆದಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನಗೈದ ನಾಯಕ ಬಗ್ಗೆ ಬಿಜೆಪಿಗರು ಹಗುರವಾಗಿ ಮಾತನಾಡುತ್ತಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ. ಸಿ ಟಿ ರವಿ ಅವರು ನೆಹರೂ ಅವರನ್ನು ಟೀಕಿಸುವುದು ಖಂಡನೀಯ. ಬಿಜೆಪಿ ನಾಯಕರಿಗೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದು ಅಭ್ಯಾಸವಾಗಿದೆ" ಎಂದಿದ್ದಾರೆ.
"ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಟೀಕಿಸುವ ಸಿ ಟಿ ರವಿಯಂತವರೇ ನಿಜವಾದ ದೇಶದ್ರೋಹಿಗಳು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂದರೆ ಎಲ್ಲವೂ ನಾನೇ ಎಂದು ಭಾವಿಸಿಕೊಂಡಿದ್ದಾರೆ" ಎಂದು ಕಿಡಿಕಾರಿದ್ದಾರೆ.
"ಸಿಟಿ ರವಿ ಅವರು ಕಾಂಗ್ರೆಸ್ ನಾಯಕರನ್ನು ನೆಹರೂ ಅವರ ಗುಲಾಮರು ಎಂದು ಕರೆದಿದ್ದಾರೆ. ಅದೃಷ್ಟವಶಾತ್, ನಾವು ಬಿಜೆಪಿಯಂತಹ ಕಾರ್ಪೊರೇಟ್ ಕಂಪನಿಗಳ ಗುಲಾಮರಾಗಲಿಲ್ಲ" ಎಂದಿದ್ದಾರೆ.
ಪುತ್ತೂರಿನ ಕಬಕದಲ್ಲಿ ನಡೆದ ಘಟನೆಯ ಬಗ್ಗೆ ಮಾತನಾಡಿದ ಅವರು, "ಈ ಘಟನೆಗೆ ರಾಜ್ಯ ಸರ್ಕಾರ ಹಾಗೂ ದ.ಕ ಜಿಲ್ಲಾಡಳಿತ ಹೊಣೆಯಾಗಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸ್ವಾತಂತ್ರ್ಯ ದಿನದ ಕಾರ್ಯಕ್ರಮಗಳಲ್ಲಿ ಒಂದು ಘರ್ಷಣೆಯೂ ನಡೆದಿಲ್ಲ" ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಯುವ ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಲುಕ್ಮಾನ್ ಬಂಟ್ವಾಳ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಕಾಂಗ್ರೆಸ್ ಮುಖಂಡ ನವೀನ್ ಡಿಸೋಜಾ, ಹರಿನಾಥ್, ಪ್ರತಿಭಾ ಕುಳಾಯಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.