ಉಡುಪಿ, ಆ 20 (DaijiworldNews/MS): ಉಡುಪಿ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಿಬ್ಬಂದಿಗಳು ಸರ್ಕಾರದ ಬಿಡುಗಡೆ ಮಾಡಿದ ಹಣವನ್ನು ವೇತನಕ್ಕೆ ಒಳಸುವಂತೆ ಒತ್ತಾಯಿಸಿ ಆ.೧೯ ರ ಗುರುವಾರ ಸಂಜೆ ಪ್ರತಿಭಟನೆ ನಡೆಸಿದರು.
ಬಾಕಿ ಇರುವ ವೇತನ ಪಾವತಿಸುವ ನಿಟ್ಟಿನಲ್ಲಿ ಸುವರ್ಣ ಆರೋಗ್ಯ ಟ್ರಸ್ಟ್ನಿಂದ 50ಲಕ್ಷ ರೂ. ಹಣವನ್ನು ಬಿಡುಗಡೆ ಮಾಡಲಾಗಿದ್ದು, ಈ ಪೂರ್ಣ ಹಣವನ್ನು ಸಂಬಳ ನೀಡಲು ಬಳಸಿಲ್ಲ ಎಂದು ಆರೋಪಿಸಿ ಸಿಬ್ಬಂದಿಗಳು ಆಸ್ಪತ್ರೆಯಲ್ಲಿ ಮುಷ್ಕರ ನಡೆಸಿದರು.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಶಾಸಕ ಕೆ.ರಘುಪತಿ ಭಟ್, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಆಸ್ಪತ್ರೆಗೆ ಬಂದು ಮಾಹಿತಿ ಪಡೆದುಕೊಂಡರು.
ಮೂರು ತಾಸು ಕಾದರೂ ಆಸ್ಪತ್ರೆಯ ಆಡಳಿತ ಮಂಡಳಿಯವರು ಬಾರದ ಹಿನ್ನೆಲೆಯಲ್ಲಿ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ದೂರವಾಣಿ ಮೂಲಕ ಜಿಲ್ಲಾಧಿಕಾರಿಯೊಂದಿಗೆ ಶಾಸಕರು ಮಾತುಕತೆ ನಡೆಸಿದರು. ಈ ವೇಳೆ ಡಿಸಿ ನಾಳೆ ಸಭೆ ಕರೆದು ಚರ್ಚಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದರು. ಪೂರ್ಣ ಸಂಬಳ ನೀಡುವವರೆಗೆ ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರ ಮುಂದುವರೆಸುವುದಾಗಿ ಸಿಬ್ಬಂದಿ ಪಟ್ಟು ಹಿಡಿದಿದ್ದಾರೆ.