ಮಂಗಳೂರು, ಆ. 24 (DaijiworldNews/SM): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಲೇಜುಗಳು ಪುನರಾರಂಭಗೊಂಡ ನಂತರ ಸುಮಾರು 620 ವಿದ್ಯಾರ್ಥಿಗಳು ಕರೋನಾ ಸೋಂಕು ಪತ್ತೆಯಾಗಿದೆ ಎನ್ನುವ ಮಾಹಿತಿ ಲಭಿಸಿದೆ. ಸೋಂಕು ಪತ್ತೆಯಾದ ವಿದ್ಯಾರ್ಥಿಗಳ ಪೈಕಿ ಬಹುತೇಕರು ಹೊರ ರಾಜ್ಯಗಳಾದ ಕೇರಳ, ಮಹಾರಾಷ್ಟ್ರ, ಹೊರ ಜಿಲ್ಲೆ ಉಡುಪಿಯವರು ಒಳಗೊಂಡಿದ್ದಾರೆ ಎನ್ನಲಾಗಿದೆ.
ಕಾಲೇಜು ಆರಂಭ ಹಿನ್ನೆಲೆಯಲ್ಲಿ ಹಾಸ್ಟೆಲ್ ಗಳಲ್ಲಿ, ಪಿಜಿಗಳಲ್ಲಿ ತಂಗುವ ಹೊರ ರಾಜ್ಯಗಳ ವಿದ್ಯಾರ್ಥಿಗಳು, ಹಾಗೂ ಜಿಲ್ಲೆಯ ಸುಮಾರು 900ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ ಜಿಲ್ಲೆಯ 29 ಕಾಲೇಜುಗಳ ಸುಮಾರು 620 ವಿದ್ಯಾರ್ಥಿಗಳಲ್ಲಿ ಸೋಂಕು ಇದೆ ಎಂದು ತಿಳಿದುಬಂದಿದೆ.
ಕೋವಿಡ್ 19 ಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ನೋಡಲ್ ಅಧಿಕಾರಿ ಡಾ ಅಶೋಕ್ ಅವರು ಮಾಹಿತಿ ನೀಡಿದ್ದು, ಪರೀಕ್ಷೆಗಳು ಮತ್ತು ದೈಹಿಕ ತರಗತಿಗಳ ಸಮಯದಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸದ ಬಹುತೇಕ ಕಾಲೇಜುಗಳಿಗೆ ನೋಟಿಸ್ ನೀಡಲಾಗಿದೆ ಎಂದು ಹೇಳಿದರು. ಕೆಲವು ಸಂಸ್ಥೆಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ವಿಫಲವಾದ ಕಾರಣ ಕಳೆದ ಕೆಲವು ವಾರಗಳಲ್ಲಿ ಪರೀಕ್ಷೆಗೆ ಹಾಜರಾದ ಹೆಚ್ಚಿನ ವಿದ್ಯಾರ್ಥಿಗಳು ಸೋಂಕಿಗೆ ಒಳಗಾಗಿದ್ದಾರೆ ಎಂದು ಅವರು ಹೇಳಿದರು.
ಪ್ರಸ್ತುತ ಸೋಂಕಿತ ವಿದ್ಯಾರ್ಥಿಗಳು ತಮ್ಮ ಹಾಸ್ಟೆಲ್ಗಳು, ಫ್ಲಾಟ್ಗಳು ಮತ್ತು ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಕ್ವಾರಂಟೈನ್ನಲ್ಲಿದ್ದಾರೆ. 630 ವಿದ್ಯಾರ್ಥಿಗಳ ವರದಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಕೆಲವು ಕಾಲೇಜುಗಳಿಗೆ ದೈಹಿಕ ತರಗತಿ ನಡೆಸುವುದನ್ನು ನಿಲ್ಲಿಸುವಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.