ಕಾಸರಗೋಡು, ಆ 28 (DaijiworldNews/MS): ಕೃಷಿ ಸ್ಥಳಗಳಲ್ಲಿ ಕಾಡುಪ್ರಾಣಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಶೀಘ್ರ ಯೋಜನೆಯೊಂದನ್ನು ರೂಪಿಸಲಾಗುವುದು ಎಂದು ಕೇರಳ ಅರಣ್ಯ ಸಚಿವ ಎ. ಕೆ. ಶಶೀ೦ದ್ರನ್ ಹೇಳಿದರು.
ಅವರು ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡುತ್ತಿದ್ದರು. ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಜನವಾಸ ವಲಯಗಳಲ್ಲಿ ಕಾಡುಪ್ರಾಣಿಗಳ ಉಪಟಳ ತಡೆಗೂ ಕ್ರಮ ತೆಗೆದುಕೊಳ್ಳಲಾಗುವುದು. ಸ್ಥಳೀಯಾಡಳಿತ ಸಂಸ್ಥೆಗಳು ಈ ಯೋಜನೆಯಲ್ಲಿ ಭಾಗಿಗಳಾಗಲಿವೆ . ಇದಕ್ಕೆ ಸ್ಥಳೀಯಾಡಳಿತ ಸಂಸ್ಥೆಗಳ ಅನುದಾನ , ಶಾಸಕರ ನಿಧಿಯನ್ನು ಬಳಸಬಹುದು . ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ , ಜಿಲ್ಲಾ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಎಲ್ಲಾ ಗ್ರಾಮ ಪಂಚಾಯತ್ ಅಧ್ಯಕ್ಷರ ಸಭೆ ಕರೆದು ಪರಿಹಾರಕ್ಕೆ ತೀರ್ಮಾನಿಸಲಾಗಿದೆ. ಕೆಲ ಪ್ರದೇಶಗಳಲ್ಲಿ ಅಳವಡಿಸಿರುವ ಸೋಲಾರ್ ಬೇಲಿಗಳು ಪ್ರಯೋಜನಕ್ಕೆ ಬಂದಿಲ್ಲ ಎಂದು ಸಚಿವರು ಹೇಳಿದರು.
ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲಾಧಿಕಾರಿಗಳ ಸಭೆಯನ್ನು ಮುಂದಿನ ಎರಡು ವಾರಗಳೊಳಗೆ ಕರೆಯಲಾಗುವುದು ಎಂದು ಸಚಿವರು ಹೇಳಿದರು. ಶಾಸಕರಾದ ಎನ್.ಎ.ನೆಲ್ಲಿಕುನ್ನು, ಇ.ಚಂದ್ರಶೇಖರನ್, ಸಿ.ಎಚ್.ಕುಂಞಂಬು, ಎಂ.ರಾಜಗೋಪಾಲನ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್, ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣ್ ವೀರ್ ಚಂದ್ ಮೊದಲಾದವರು ಉಪಸ್ಥಿತರಿದ್ದರು