ಮಂಗಳೂರು, ಆ 28 (DaijiworldNews/PY): ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು-ಮಂಗಳೂರು ರಸ್ತೆಯ ಮಾರನಹಳ್ಳಿಯಿಂದ ದೊಣಿಗಾಲ್ವರೆಗಿನ ರಸ್ತೆಯಲ್ಲಿ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಬಸ್ಸುಗಳು ಹಾಗೂ ತುರ್ತು ವಾಹನಗಳು (ಆಂಬ್ಯುಲೆನ್ಸ್ ಹಾಗೂ ಅಗ್ನಿಶಾಮಕ ವಾಹನಗಳು) ಹೊರತುಪಡಿಸಿ ಎಲ್ಲಾ ಬಗೆಯ ವಾಹನಗಳ ಸಂಚಾರವನ್ನು ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನಿರ್ಬಂಧಿಸುವಂತೆ ಹಾಸನ ಜಿಲ್ಲಾಧಿಕಾರಿ ಆರ್ ಗಿರೀಶ್ ಅವರು ಆದೇಶಿಸಿದ್ದಾರೆ.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಆ.28ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿರುವ ಬಗ್ಗೆ ಅವಶ್ಯವಿರುವ ಸೂಚನಾ ಫಲಕಗಳನ್ನು ಅಳವಡಿಸಲು ಹಾಗೂ ಸಂಚಾರ ನಿಯಂತ್ರಣ ಸಿಬ್ಬಂದಿಗಳನ್ನು ನೇಮಕಗೊಳಿಸಲು ಹಾಸನ ಪೊಲೀಸ್ ಅಧೀಕ್ಷಕರಿಗೆ ಅಧಿಕಾರವಿದೆ. ಹಾಸನ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಯೋಜನಾ ನಿರ್ದೇಶಕರು ಸಿಂಗಲ್ ಲೇನ್ನಲ್ಲಿ ಮಾತ್ರ ವಾಹನ ಸಂಚರಿಸುವಂತೆ ನೋಡಿಕೊಳ್ಳಬೇಕು. ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪೊಲೀಸ್ ಇಲಾಖೆಯೊಂದಿಗೆ ವಾಹನ ನಿಯಂತ್ರಣ ಕಾರ್ಯದಲ್ಲಿ ಸೂಕ್ತ ಸಹಕಾರ ನೀಡಬೇಕು ಎಂದು ಸೂಚಿಸಿದ್ದಾರೆ.