ಮಂಗಳೂರು, ಆ. 30 (DaijiworldNews/SM): ಹೆಚ್ಚು ಹೆಚ್ಚು ಪರೀಕ್ಷೆಗಳನ್ನು ನಡೆಸುವ ಮೂಲಕ ಕೋವಿಡ್-19 ಸೋಂಕನ್ನು ನಿಯಂತ್ರಿಸಬಹುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಸಲಹೆ ನೀಡಿದರು.
ಅವರು ಆ.30ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ಸೋಂಕು ನಿರ್ವಹಣೆ ಹಾಗೂ ನಿಯಂತ್ರಣಕ್ಕೆ ಸಂಬಂಧಿಸಿಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ಸೂಚ್ಯಂಕ ಕಡಿಮೆಯಾಗುತ್ತಿದೆ, ಇದೀಗ ಪ್ರತಿದಿನ 15,000 ಕೊರೊನಾ ತಪಾಸಣೆಗಳನ್ನು ಮಾಡಲಾಗುತ್ತಿದೆ, ಈ ಪರೀಕ್ಷೆಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸುವ ಮೂಲಕ ಸೋಂಕು ಹರಡುವಿಕೆಯನ್ನು ತಡೆಗಟ್ಟಬಹುದು ಎಂದ ಸಚಿವರು, ಹೋಂ ಕ್ವಾರಂಟೈನ್ನಲ್ಲಿರುವ ಕೋವಿಡ್ ಸೋಂಕಿತರು ಹೊರಗೆ ಬಾರದಂತೆ ಆ ಭಾಗದ ವ್ಯಾಪ್ತಿಗೊಳಪಡುವ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಜನಪ್ರತಿನಿಧಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ನಿಗಾವಹಿಸಬೇಕು ಎಂದರು.
ಗ್ರಾಮೀಣ ಮತ್ತು ಪಟ್ಟಣ ಪ್ರದೇಶದಲ್ಲಿನ ವೈದ್ಯಾಧಿಕಾರಿಗಳು ಹಾಗೂ ಸಂಬಂಧಿಸಿದ ಸಿಬ್ಬಂದಿಗಳು ಕೋವಿಡ್ ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಗುರುತಿಸಬೇಕು, ಸೋಂಕು ಹೊಂದಿದ್ದಲ್ಲೀ ಅವರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ಗಳಿಗೆ ದಾಖಲಿಸಬೇಕು ಆ ಮೂಲಕವೂ ಸೋಂಕನ್ನು ನಿಯಂತ್ರಿಸಬಹುದು ಎಂದರು. ಕೋವಿಡ್ ಸೋಂಕಿತರು ಆಯುಷ್ಮಾನ್ ಕಾರ್ಡ್ ಹೊಂದಿರುವ ಬಗ್ಗೆ ಪರಿಶೀಲಿಸಬೇಕು, ಹಾಗೂ ಅವರಿಗೆ ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂದು ಅವರು ತಿಳಿಸಿದರು.