ಮಂಗಳೂರು, ಸೆ. 08 (DaijiworldNews/PY): ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ವಾರಾಂತ್ಯದಲ್ಲಿ ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
"ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ಮುಂದಿನ ಆದೇಶದವರೆಗೆ ಭಕ್ತಾದಿಗಳಿಗೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಮಾತ್ರ ತೆರೆಯಲಾಗಿರುತ್ತದೆ. ಈ ಸಂದರ್ಭದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ, ಅಗತ್ಯ ಮಂಜಾಗ್ರತಾ ಕ್ರಮಗಳನ್ನು ಕೈಗೊಂಡು ಭಕ್ತಾದಿಗಳಿಗೆ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ತೀರ್ಥ ಪ್ರಸಾದ, ಸೇವೆಗಳು, ಅನ್ನಸಂತರ್ಪಣೆಗೆ ಅವಕಾಶವಿರುವುದಿಲ್ಲ" ಎಂದು ತಿಳಿಸಿದ್ದಾರೆ.
"ವಾರಾಂತ್ಯದಲ್ಲಿ ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಹಾಗೂ ವಸತಿ ಗೃಹಗಳಲ್ಲಿ ತಂಗುವುದಾಗಲೀ ಅಥವಾ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಶನಿವಾರ ಮತ್ತು ಭಾನುವಾರ ಎಲ್ಲಾ ರೀತಿಯ, ಉತ್ಸವ, ಸೇವೆಗಳ, ತೀರ್ಥ, ಪ್ರಸಾದ, ಮುಡಿ ಸೇವೆ ವಸತಿಗಳನ್ನು ನಿರ್ಬಂಧಿಸಿ, ಅರ್ಚಕರುಗಳಿಂದ ಸಾಂಪ್ರಾದಾಯಿಕ ಪೂಜೆಗೆ ಅವಕಾಶ ಕಲ್ಪಿಸಲಾಗಿದೆ. ಜಾತ್ರೆಗಳು, ದೇವಾಲಯದ ಉತ್ಸವಗಳು ಹಾಗೂ ಮೆರವಣಿಗೆಗಳನ್ನು ಸಹ ನಿರ್ಬಂಧಿಸಲಾಗಿದೆ" ಎಂದಿದ್ದಾರೆ.
"ಈ ಆದೇಶವನ್ನು ಉಲ್ಲಂಘಿಸಿದಲ್ಲಿದವರ ವಿರುದ್ಧ ಕ್ರಮ ಜರುಗಿಸಲಾಗುವುದು" ಎಂದು ತಿಳಿಸಿದ್ದಾರೆ.