ಮಂಗಳೂರು, ಸೆ.19 (DaijiworldNews/PY): ಕೊರೊನಾ ಸೋಂಕಿನ ಪಾಸಿಟಿವಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರತಿಷ್ಠಿತ ದೇವಸ್ಥಾನಗಳಾದ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಈ ಹಿಂದೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ಹಿಂಪಡೆದು ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಹಾಗೂ ಸೇವೆಗಳನ್ನು ನಡೆಸಲು ಷರತ್ತುಗಳನ್ನು ಪಾಲಿಸುವ ನಿಬಂಧನೆಗಳಿಗೊಳಪಟ್ಟು ಜಿಲ್ಲಾಡಳಿತ ಅನುಮತಿ ನೀಡಿದೆ.
"ದೇವಾಲಯಗಳಲ್ಲಿ ಕೊರೊನಾ ಸಮುಚಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು, ದೇವಳದ ಆಡಳಿತ ವರ್ಗವು ಇದನ್ನು ಕಟ್ಟುನಿಟ್ಟಾಗಿ ಅನುಸರಿಸುವ ಜವಾಬ್ದಾರಿಯನ್ನು ಹೊಂದಿದೆ. ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಆಡಳಿತ ಮಂಡಳಿ, ಅರ್ಚಕರು, ಸಿಬ್ಬಂದಿಗಳು ಸೇರಿದಂತೆ ಎಲ್ಲಾ ವರ್ಗದವರು ಪ್ರತಿ 15 ದಿನಗಳಿಗೊಮ್ಮೆ ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಿ ನೆಗೆಟಿವ್ ವರದಿಯನ್ನು ಹೊಂದಿರಬೇಕು" ಎಂದು ತಿಳಿಸಿದೆ.
"ದೇವಾಲಯಗಳಿಗೆ ಸೇವೆಗೆ ಬರುವ ಭಕ್ತರು 2 ಡೋಸ್ ಕೊರೊನಾ ಲಸಿಕೆ ಪಡೆದಿದ್ದರೂ ಸಹ ಕಡ್ಡಾಯವಾಗಿ 72 ಗಂಟೆಗಳಿಗಿಂತ ಮುಂಚಿತವಾಗಿ ಆರ್ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿದ್ದಲ್ಲಿ ಮಾತ್ರ ಸೇವೆಗೆ ಅವಕಾಶ ನೀಡಬೇಕು. ದೇವಾಲಯಗಳಿಗೆ ಬರುವ ಭಕ್ತರಿಗೆ ಕೊರೊನಾ ಲಸಿಕೆಯನ್ನು ಪಡೆಯುವ ಬಗ್ಗೆ ಸಲಹೆಗಳನ್ನು ನೀಡುವ ಕುರಿತು ಹಾಗೂ ಜಾಗೃತಿಯನ್ನು ಮೂಡಿಸುವ ಸಲುವಾಗಿ ಅಲ್ಲಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು" ಎಂದು ಹೇಳಿದೆ.
"ದೇವಾಲಯಕ್ಕೆ ಬರುವ ಸಾರ್ವಜನಿಕರು ಕೊರೊನಾ ಲಸಿಕೆ ಪಡೆಯದಿದ್ದಲ್ಲಿ, ಅಂತಹವರುಗಳಿಗೆ ಲಸಿಕೆ ನೀಡಲು ಅನುಕೂಲವಾಗುವಂತೆ ಸಂಬಂಧಪಟ್ಟ ತಾಲೂಕು ಆರೋಗ್ಯಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ದೇವಾಲಯಗಳಲ್ಲಿ ಕೊರೊನಾ ಲಸಿಕಾ ಕೇಂದ್ರಗಳನ್ನು ತೆರೆಯಲು ಹಾಗೂ ಜನಸಂದಣಿಯಾಗದಂತ ಲಸಿಕೆ ನೀಡಲು ಕ್ರಮವಹಿಸಬೇಕು" ಎಂದು ತಿಳಿಸಿದೆ.
ಮೇಲ್ಕಂಡ ದೇವಾಲಯಗಳಲ್ಲಿ ನಡೆಯುವಂತಹ ಪ್ರಮುಖ ಸೇವೆಗಳನ್ನು (ಅಂದರೆ ಸರ್ಪಸಂಸ್ಕಾರ, ಆಶ್ಲೇಷ ಬಲಿ, ಪಂಚಾಮೃತ ಮಹಾಭಿಷೇಕ, ನಾಗಪ್ರತಿಷ್ಠೆ ಸೇವೆಗಳು ಇತ್ಯಾದಿ) ಆದಷ್ಟು ಮಿತಿಗೊಳಿಸುವುದು ಹಾಗೂ ಜನಸಂದಣಿಯಾಗದಂತೆ ದಿನವೊಂದಕ್ಕೆ ದೇವಳದ ಸ್ಥಳ ಸಾಮಥ್ರ್ಯವನ್ನು ಹೊಂದಿಕೊಂಡು ಕನಿಷ್ಟ ಸಂಖ್ಯೆಯಲ್ಲಿ ಸೇವೆಗಳನ್ನು ನಡೆಸಲು ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ.