ಬಂಟ್ವಾಳ, ಸೆ 21(DaijiworldNews/MS): ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ವಿಚಾರ ಮಂಥನ ಆಗಬೇಕು, ವಿರೋಧ ಪಕ್ಷದವರನ್ನು ಎದುರಿಸುವ ಬಲಿಷ್ಠ ಸೈನ್ಯ ನಮ್ಮಲ್ಲಿರಬೇಕು, ಯುವಕರನ್ನು ಪಕ್ಷಕ್ಷೆ ಆಕರ್ಷಿಸುವ ಮೂಲಕ ಮತ್ತೆ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಕಾರ್ಯ ಆಗಬೇಕು ಎಂದು ಮಾಜಿ ಸಚಿವ ವಿನಯ್ಕುಮಾರ್ ಸೊರಕೆ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.
ಯುವ ಕಾಂಗ್ರೆಸ್ ಪಾಣೆಮಂಗಳೂರು ಬ್ಲಾಕ್ ವತಿಯಿಂದ ಸೋಮವಾರ ಸಂಜೆ ಮೊಡಂಕಾಪುವಿನ ಚರ್ಚ್ ಸಭಾಂಗಣದಲ್ಲಿ ನಡೆದ ಯುವ ಚೈತನ್ಯ ಕಾರ್ಯಗಾರ ಹಾಗೂ ಬೂತ್ ಹಾಗೂ ಗ್ರಾಮ ಸಮಿತಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಎಲ್ಲ ಜಾತಿ, ಧರ್ಮ, ಭಾಷೆ, ಸಂಸ್ಕೃತಿಯ ಜನರನ್ನು ಒಟ್ಟು ಸೇರಿಸುವ ಜೊತೆಗೆ ಜನರ ಬದುಕು ಕಟ್ಟುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದ್ದರೆ, ಧರ್ಮ, ಜಾತಿಯ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಬಂಟ್ವಾಳ ಕ್ಷೇತ್ರದಲ್ಲಿ ರಮನಾಥ ರೈ ಮಾಡಿದ ಅಭಿವೃದ್ದಿ ಕಾರ್ಯಕ್ರಮಗಳನ್ನು ಮರೆ ಮಾಚಲು ಯಾರಿಂದಲೂ ಸಾಧ್ಯವಿಲ್ಲ. ಭಾವನಾತ್ಮಕ ವಿಚಾರಗಳ ಮೂಲಕ ಜನರನ್ನು ಮರಳು ಗೊಳಿಸಲಾಗುತ್ತಿದೆ, ಜಾತ್ಯತೀತ ಶಕ್ತಿ ಕ್ಷೀಣಿಸಿದಾಗ ಕೋಮುಶಕ್ತಿಗಳು ಬಲಗೊಳ್ಳುತ್ತದೆ ಎಂದರು. ಇದೇ ಸಂದರ್ಭ ಯುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆ ಮಾಡಿದರು..
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಮಾತನಾಡಿ ಮನುವಾದವನ್ನು ಸಮಾಜದಲ್ಲಿ ಜಾರಿಗೊಳಿಸಲು ಗಾಂಧೀಜಿಯ ಹತ್ಯೆಯಾಯಿತು. ಇಂದಿಗೂ ನಮ್ಮ ನಡುವೆ ಮನುವಾದಿಗಳು, ಗೋಡ್ಸೆವಾದಿಗಳು ಇದ್ದಾರೆ. ಇಂತವರ ವಿರುದ್ಧ ಸೈದ್ದಾಂತಿಕ ಹೋರಾಟ ಮಾಡಬೇಕಾಗಿದೆ. ಸಂವಿಧಾನ ವಿರೋಧಿಗಳನ್ನು ನಾವು ಎಂದಿಗೂ ವಿರೋಧಿಸುತ್ತೇವೆ ಎಂದು ತಿಳಿಸಿದರು.
ಮಾಜಿ ಸಚಿವ ರಮಾನಾಥ ರೈ ಚಾಲನೆ:
ಬೆಳಿಗ್ಗೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ಕಾರ್ಯಗಾರಕ್ಕೆ ಚಾಲನೆ ನೀಡಿದರು. ಅವರು ಮಾತನಾಡಿ ಬಡಜನರ ಅಭಿವೃದ್ದಿಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಕ್ಷ ಹಮ್ಮಿಕೊಂಡು ಬಂದಿದೆ, ಬ್ಯಾಂಕ್ ರಾಷ್ಟ್ರೀಕರಣ, ಭೂ ಮಸೂದೆ ಕಾನೂನು ಜಾರಿ, ಋಣ ಪರಿಹಾರ ಕಾಯ್ದೆಗಳನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು.
ಪಕ್ಷ ಪ್ರಮುಖರಾದ ಸುಧೀರ್ ಕುಮಾರ್ ಮುರೊಳ್ಳಿ, ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಮತ್ತು ಬೇಬಿ ಕುಂದರ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮನ್ನಾರ್ ಮನ್ನಾನ್, ಸಾಮಾಜಿಕ ಜಾಲತಾಣ ತಮಿಳುನಾಡು ಉಸ್ತುವಾರಿ ಸಾಗರ್ ಕಟೀಲ್, ರಾಜ್ಯ ಎನ್ಎಸ್ಐಯು ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್ ಸಿಂಧ್ಯಾ, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲು, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್. ಮೊಹಮ್ಮದ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮೊಹಮ್ಮದ್ ಬಡಗನ್ನೂರು, ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ಬಾಸ್ ಅಲಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಎಪಿಎಂಸಿ ಮಾಝಿ ಅಧ್ಯಕ್ಷ ಪದ್ಮನಾಭ ರೈ, ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ. ಪೂಜಾರಿ, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಮರೀಲ್ ರೇಗೋ,ಗಿರೀಶ್ ಆಳ್ವ, ಮೊದಲಾದವರು ಉಪಸ್ಥಿತರಿದ್ದರು.