ಮಂಗಳೂರು, ಸೆ. 26 (DaijiworldNews/SM): ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇದಕ್ಕೆ ನೂರು ದಿನಗಳಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಭಾರತ್ ಬಂದ್ ಗೆ ಕರೆ ನೀಡಿದ್ದು, ಸೋಮವಾರ ನಡೆಯುವ ಬಂದ್ ದ.ಕ. ಜಿಲ್ಲೆಯಲ್ಲಿ ಸಾಂಕೇತಿಕವಾಗಿ ನಡೆಯಲಿದ್ದು, ಸಾರ್ವಜನಿಕ ಜನ ಜೀವನಕ್ಕೆ ಯಾವುದೇ ತೊಂದರೆಯಾಗುವುದಿಲ್ಲ.
ರೈತರ ಬಂದ್ ಗೆ ಬಸ್ ಚಾಲಕ ಮಾಲಕರ ಸಂಘ ನೈತಿಕ ಬೆಂಬಲ ಸೂಚಿಸಿದೆ. ಆದರೆ, ಬಸ್ ಸಂಚಾರ ಬಂದ್ ನಡೆಸುವುದಿಲ್ಲ ಎಂದು ಸಂಘದ ಅಧ್ಯಕ್ಷರು ತಿಳಿಸಿದ್ದಾರೆ. ಅಲ್ಲದೆ, ಸಾರ್ವಜನಿಕರಿಗೆ ಯಾವುದೇ ತೊಂದರೆ ನೀಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಇನ್ನುಳಿದಂತೆ ಕರ್ನಾಟಕ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ದೈಜಿವರ್ಲ್ಡ್ ವಾಹಿನಿಗೆ ಪ್ರತಿಕ್ರಿಯೆ ನೀಡಿದ್ದು, ಜಿಲ್ಲೆಯಲ್ಲಿ ರೈತ ಹೋರಾಟ ನಡೆಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರದಂದು ಬಂಟ್ವಾಳದಲ್ಲಿ ಪ್ರತಿಭಟನೆ ನಡೆಸಲಿದ್ದೇವೆ. ರೈತರ ಹೋರಾಟಕ್ಕೆ ಸಾರ್ವಜನಿಕರು ಬೆಂಬಲಿ ನೀಡಬೇಕು. ಹಾಗೂ ಕನಿಷ್ಟ ಸ್ವಲ್ಪ ಹೊತ್ತು ಬಂದ್ ನಡೆಸುವ ಮೂಲಕ ರೈತರಿಗೆ ಬೆಂಬಲ ನೀಡಿ ಎಂದು ಅವರು ಮನವಿ ಮಾಡಿದ್ದಾರೆ.