ಕಡಬ,ಸೆ.28 (DaijiworldNews/HR): ಕಡಬ ಪೊಲೀಸ್ ಶಿವರಾಜ್ ಎಂಬಾತ ಯುವತಿಯೊಬ್ಬಳನ್ನು ಅತ್ಯಾಚಾರವೆಸಗಿ, ಆಕೆ ಗರ್ಭರ್ವತಿಯಾಗಲು ಕಾರಣನಾಗಿ ಬಳಿಕ ಆತನ ಉಸ್ತುವಾರಿಯಲ್ಲೇ ಅಬಾರ್ಷನ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳು ಕಡಬ ಠಾಣೆಗೆ ಆಗಮಿಸಿದ್ದಾರೆ.
ಸಂತ್ರಸ್ತ ಯುವತಿಯ ತಂದೆಯು ಆರೋಪಿ ಶಿವರಾಜ್ ವಿರುದ್ಧ ದೂರು ನೀಡಿದ್ದು, ತನ್ನ ಮಗಳನ್ನು ಬಲತ್ಕಾರ ಮಾಡಿ ಅತ್ಯಾಚಾರ ಎಸಗಿ ಇದೀಗ ಗರ್ಭವತಿಯಾಗಲು ಕಾರಣನಾಗಿದ್ದು, ಗರ್ಭಪಾತ ನಡೆಸುವ ಸಲುವಾಗಿ ಯುವತಿಯನ್ನು ಮಂಗಳೂರಿನಲ್ಲಿ ಅಜ್ಞಾತ ಸ್ಥಳದಲ್ಲಿರಿಸಿದ್ದಾನೆ ಎಂದು ಯುವತಿಯ ತಂದೆ ಕಡಬ ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದರು.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಕಡಬ ಠಾಣೆಗೆ ದ.ಕ ಜಿಲ್ಲಾ ಎಸ್ಪಿ ಋಷಿಕೇಶ್ ಭಗವಾನ್ ಸೋನಾವಣೆ ಹಾಗೂ ಡಿವೈಎಸ್ಪಿ ಗಾನ ಪಿ.ಕುಮಾರ್ ಸೋಮವಾರದಂದು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದು, ಇಂದು ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ, ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಶ್ ಭಗವಾನ್ ಸೋನಾವಣೆ ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಿವರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಯುವತಿಯು ಎರಡು ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಕಡಬ ಠಾಣೆಯ ಪೋಲಿಸ್ ಸಿಬ್ಬಂದಿ ಶಿವರಾಜ್ ಎಂಬಾತ ಯಾವುದೋ ದಾಖಲೆ, ಸಮನ್ಸ್ ನೀಡುವ ವಿಚಾರಕ್ಕೆ ಮನೆಗೆ ಬರುತ್ತಿದ್ದು ,ಪರಿಚಯವಾಗಿದ್ದ, ಪ್ರಕರಣ ಮುಗಿದಿದ್ದರೂ ಶಿವರಾಜ್ ಬೇರೆ ಬೇರೆ ನೆಪವೊಡ್ಡಿ ಮನೆಗೆ ಬರುತ್ತಿದ್ದು ಈ ವೇಳೆ ತಾನು ಮದುವೆಯಾಗುವುದಾಗಿ ಯುವತಿಗೆ ಒಪ್ಪಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎನ್ನಲಾಗಿದೆ.