ಮಂಗಳೂರು, ಅ.07 (DaijiworldNews/PY): "ಪಿಎಂ ಕೇರ್ ನಿಧಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಜಿಲ್ಲೆಯಲ್ಲಿ 16 ಆಕ್ಸಿಜನ್ ಉತ್ಪಾದನಾ ಘಟಕ ಕಾರ್ಯ ನಿರ್ವಹಿಸಲಿದೆ" ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ನಗರದ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ವಠಾರದಲ್ಲಿಂದು ಆಕ್ಸಿಜನ್ ಉತ್ಪಾದನಾ ಘಟಕ ಉದ್ಘಾಟಿಸಿ ಮಾತನಾಡಿದ ಅವರು, "ಕೊರೊನಾದ ಮೊದ ಹಾಗೂ ಎರಡನೇ ಅಲೆಯ ವೇಳೆ ಜಿಲ್ಲೆಯಲ್ಲಿ ಕೇವಲ ಒಂದು ಆಕ್ಸಿಜನ್ ಘಟಕ ಇದ್ದು, ಇದರ ಮೂಲಕ ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿತ್ತು. ಈ ವೇಳೆ ಬಳ್ಳಾರಿ ಹಾಗೂ ಇತರ ರಾಜ್ಯಗಳಿಂದ ಜಿಲ್ಲೆಗೆ ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿತ್ತು. ಆದರೆ, ಈಗ ವೆನ್ಲಾಕ್, ಲೇಡಿಗೋಶನ್ ಸೇರಿದಂತೆ ಜಿಲ್ಲಾ ಆಸ್ಪತ್ರೆ ಸೇರಿದಂತೆ 16 ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಎಲ್ಲಾ ಘಟಕಗಳು ಪಿಎಂ ಕೇರ್ ನಿಧಿ, ಕ್ರೆಡಾಯ್, ಎಂಆರ್ಪಿಎಲ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಬ್ಯಾಂಕ್ಗಳು ಸೇರಿದಂತೆ ವಿವಿಧ ಸಂಸ್ಥೆಗಳ ಸಹಕಾರದಲ್ಲಿ ಕಾರ್ಯ ನಿರ್ವಹಿಸಲಿವೆ" ಎಂದು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಡಾ ಕೆ. ವಿ ರಾಜೇಂದ್ರ ಮಾತನಾಡಿ, "ದ.ಕ ಜಿಲ್ಲೆಯಲ್ಲಿ ಒಟ್ಟು 16 ಆಕ್ಸಿಜನ್ ಉತ್ಪಾದನಾ ಘಟಕಗಳ್ನನು ಸ್ಥಾಪಿಸಲಾಗಿದೆ. ಇದರಲ್ಲಿ 12 ಘಟಕಗಳು ಸಂಪೂರ್ಣ ಕಾರ್ಯನಿರ್ವಹಿಸಲು ಪ್ರಾರಂಭಿಸಿವೆ. ಎರಡು ಪ್ರಾಯೋಗಿಕ ಹಂತದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ" ಎಂದಿದ್ದಾರೆ.
ಈ ಸಂದರ್ಭ ಶಾಸಕ ವೇದವ್ಯಾಸ್ ಕಾಮತ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಹಾಗೂ ಅಧೀಕ್ಷಕ ಡಾ ಸದಾಶಿವ ಶ್ಯಾನ್ಭೋಗ್, ಜಿಲ್ಲಾ ಆರೋಗ್ಯಾಧಿಕಾರಿ ಡಾ ಕಿಶೋರ್ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.