ಕುಂದಾಪುರ, ಅ.11 (DaijiworldNews/PY): "ಸಹಕಾರ ಸಂಘಗಳು ಎಲ್ಲಿಯೂ ವಿಲೀನ ಆಗುವುದಿಲ್ಲ. ಜನರಿಗೆ ಆರ್ಥಿಕ ಶಕ್ತಿ ನೀಡಿ ಸ್ವಾವಲಂಬನೆಗೆ ಉತ್ತೇಜಿಸುತ್ತವೆ. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಜನರ ಬ್ಯಾಂಕು ಜನರ ಬಳಿಗೆ ತೆರಳಿ ಕೆಲಸ ಮಾಡಲಾಗುತ್ತಿದೆ" ಎಂದು ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.
ಅವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ 106ನೇ ಶಂಕರನಾರಾಯಣ ಶಾಖೆಯನ್ನು ಉದ್ಘಾಟಿಸಿ, ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
"ಬ್ಯಾಂಕ್ ಜನರ ಬಳಿಗೆ ತೆರಳುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಗೊಂದು ವಾಹನವನ್ನು ಶೀಘ್ರ ಬಿಡುಗಡೆ ಮಾಡಲಾಗುತ್ತದೆ. ಗ್ರಾಮಾಂತರ ಪ್ರದೇಶದ ಜನರ ಬಳಿಗೇ ತೆರಳಿ ಅವರ ಆರ್ಥಿಕ ಶಕ್ತಿ ನೀಡುವ ಕೆಲಸ ಮಾಡಲಾಗುತ್ತದೆ" ಎಂದು ಅವರು ಹೇಳಿದರು.
"ನವೋದಯ ಸಂಘಗಳಿಂದ ಸ್ವಾವಲಂಬನೆಗೆ ಒತ್ತು ನೀಡಲಾಗುತ್ತಿದೆ. ಬಡ್ಡಿ ಶೋಷಣೆ ನಿಲ್ಲಬೇಕು. ಚಕ್ರ ಬಡ್ಡಿಯ ಸುಳಿಗೆ ಜನಸಾಮಾನ್ಯರು ಸಿಲುಕಬಾರದು. ಬಡ್ಡಿ ಶೋಷಣೆ ನಿಲ್ಲಬೇಕು. ಕಡಿಮೆ ಬಡ್ಡಿಯಲ್ಲಿ ಸಾಲಸೌಲಭ್ಯಗಳು ಸಿಗಬೇಕು ಎನ್ನುವ ನೆಲೆಯಲ್ಲಿ ಕಾರ್ಯಕ್ರಮಗಳ ರೂಪಿಸಲಾಗುತ್ತಿದೆ" ಎಂದರು.
ನೂತನ ಶಾಖೆಯ ಗಣಕೀಕರಣವನ್ನು ಶಂಕರನಾರಾಯಣ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕೆ. ಸಚ್ಚಿದಾನಂದ ವೈದ್ಯ ಉದ್ಘಾಟಿಸಿದರು.
ಶಂಕರನಾರಾಯಣ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ ಸಂತೋಷ ದೇವಾಡಿಗ ಭದ್ರತಾಕೋಶವನ್ನು ಉದ್ಘಾಟಿಸಿದರು.
ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮಾಜಿ ನಿರ್ದೇಶಕ ಜಿ.ಎಸ್. ಹರಿಪ್ರಸಾದ್ ಆಚಾರ್ ಶುಭ ಹಾರೈಸಿದರು.
ಕಟ್ಟಡ ಮಾಲಕ ಹೆಚ್. ಸದಾಶಿವ ನಾಯಕ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಕೆ.ಎಂ.ಎಫ್ ನಿರ್ದೇಶಕ ಗೋಪಾಲಕೃಷ್ಣ ಕಾಮತ್, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಪ್ರಭಾರ) ರವೀಂದ್ರ ಬಿ., ನಿರ್ದೇಶಕ ಕೆ.ಹರಿಶ್ಚಂದ್ರ, ಬಿ.ಅಶೋಕ್ ಕುಮಾರ್ ಶೆಟ್ಟಿ, ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಟ್ಟಡ ಮಾಲಕ ಹೆಚ್. ಸದಾಶಿವ ನಾಯಕ್, ಶಂಕರನಾರಾಯಣ ಶಾಖೆಯ ಶಾಖಾ ವ್ಯವಸ್ಥಾಪಕ (ಪ್ರಭಾರ) ಚಂದ್ರಶೇಖರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ದಿವ್ಯಾ ಮತ್ತು ಪ್ರತೀಕ್ಷಾ ಪ್ರಾರ್ಥಿಸಿ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಮೊಳಹಳ್ಳಿ ಮಹೇಶ್ ಹೆಗ್ಡೆ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್.ರಾಜು ಪೂಜಾರಿ ವಂದಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು.