ಮಂಗಳೂರು, ಅ 27(DaijiworldNews/MS): ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅವರ ವಿರುದ್ದ ಲೋಕಾಯುಕ್ತವು, ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ನಗರದ ಹೊರವಲಯದ ಜೋಕಟ್ಟೆಯಲ್ಲಿರುವ ಕೈಗಾರಿಕಾ ಸಂಸ್ಥೆಯಿಂದ ಹೊಳೆ ಮತ್ತು ಫಲ್ಗುಣಿ ನದಿಗೆ ತ್ಯಾಜ್ಯ ನೀರು ಸೇರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ದೂರು ದಾಖಲಿಸಿಕೊಂಡು ಜಿಲ್ಲಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.
ತ್ಯಾಜ್ಯ ಸಮಸ್ಯೆ ಗಂಭೀರವಾಗಿ ಪರಿಗಣಿಸಿದ ಲೋಕಾಯುಕ್ತ ಜಲಮೂಲ ಕಲುಷಿತಗೊಳ್ಳುತ್ತಿರುವ ಬಗ್ಗೆ ವಸ್ತುಸ್ಥಿತಿಯ ವರದಿ ಮತ್ತು ಅದರ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮದ ಬಗ್ಗೆ ನವೆಂಬರ್ 2ರ ಒಳಗಾಗಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ, ಮಹಾನಗರ ಪಾಲಿಕೆ ಆಯುಕ್ತ, ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ, ಮಂಗಳೂರು ತಹಶೀಲ್ದಾರ್, ಕೆಎಸ್ಪಿಸಿಬಿಯ ಹಿರಿಯ ಪರಿಸರ ಅಧಿಕಾರಿ, ಸಂಸ್ಥೆಯೊಂದರ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿದೆ.
ಲೋಕಾಯುಕ್ತ ನ್ಯಾ.ಪಿ ವಿಶ್ವನಾಥ್ ಶೆಟ್ಟಿಯವರು 23 ಪುಟಗಳ ಸುದೀರ್ಘ ನೊಟೀಸ್ ನಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ್ದು ಪರಿಸರ ಮಾಲಿನ್ಯವನ್ನು
ತಡೆಗಟ್ಟುವುದು ರಾಜ್ಯ ಹಾಗೂ ಅಧಿಕಾರಿಗಳ ಕರ್ತವ್ಯ ಎಂದು ಪರಿಸರ ಮಾಲಿನ್ಯದ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪನ್ನು ನೊಟೀಸ್ ನಲ್ಲಿ ಉಲ್ಲೇಖಿಸಿದ್ದಾರೆ.