ಕುಂದಾಪುರ, ಅ.28 (DaijiworldNews/PY): 2019ರ ಜ.26ರಂದು ಕೋಟದ ಮಣೂರಿನಲ್ಲಿ ನಡೆದಿದ್ದ ಅವಳಿ ಕೊಲೆ ಪ್ರಕರಣದ ವಿಚಾರಣೆಯನ್ನು ಮುಂದಿನ ಆರು ತಿಂಗಳೊಳಗೆ ಮುಗಿಸುವಂತೆ ಸುಪ್ರೀಂ ಕೋರ್ಟ್ ಕುಂದಾಪುರದ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯಕ್ಕೆ ಆದೇಶಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಇಂದಿರಾ ಬ್ಯಾನರ್ಜಿ ಹಾಗೂ ಜೆ ಕೆ ಮಹೇಶ್ವರಿ ಅವರಿದ್ದ ದ್ವಿಸದಸ್ಯ ಪೀಠವು ಈ ಆದೇಶ ಹೊರಡಿಸಿದೆ.
ಈ ವೇಳೆ ಪ್ರಕರಣದ ಆರೋಪಿಗಳಲ್ಲಿ ಓರ್ವನಾದ ಜಿ.ಪಂ ಮಾಜಿ ಸದಸ್ಯ ಬಾರಿಕೆರೆ ರಾಘವೇಂದ್ರ ಕಾಂಚನ್ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಒಂದು ವೇಳೆ ಆರು ತಿಂಗಳಲ್ಲಿ ಪ್ರಕರಣದ ಅರ್ಜಿ ವಿಚಾರಣೆ ಪೂರ್ಣಗೊಳ್ಳದಿದ್ದಲ್ಲಿ ನೀವು ಪುನಃ ಜಾಮೀನಿಗಾಗಿ ಸಂಬಂಧಪಟ್ಟ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬಹುದು ಎನ್ನುವುದಾಗಿ ಆದೇಶದಲ್ಲಿ ತಿಳಿಸಿದೆ.
ಈತನಿಗೆ 2019ರಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದರೂ ಕೂಡಾ ಭರತ್ ಅವರ ತಾಯಿ ಪಾರ್ವತಿ ಅವರು ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದನ್ನು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಕಳೆದ ವರ್ಷದ ಜ.20ರಂದು ಜಾಮೀನು ವಜಾಗೊಳಿಸಿ ಆದೇಶ ನೀಡಿತ್ತು. ಇದಾದ ಬಳಿಕ ರಾಘವೇಂದ್ರ ಕಾಂಚನ್ ಮತ್ತೊಮ್ಮೆ ಜಾಮೀನಿಗಾಗಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
2019ರ ಜ.26ರಂದು ಮಣೂರಿನಲ್ಲಿ 2 ಗೆಳೆಯರನ್ನು ತಲವಾರಿನಿಂದ ಕೊಚ್ಚಿ ಕೊಲೆಗೈಯಲಾಗಿತ್ತು. ಈ ಕೊಲೆಗೆ ಜಿ.ಪಂ ಕೋಟ ಕ್ಷೇತ್ರದ ಸದಸ್ಯ ರಾಘವೇಂದ್ರ ಕಾಂಚನ್ ಅವರು ಪ್ರೇರಣೆ ನೀಡಿದ್ದಾರೆ ಎನ್ನುವ ಆರೋಪದಲ್ಲಿ ರಾಘವೇಂದ್ರ ಕಾಂಚನ್ ಅವರನ್ನು ಬಂಧಿಸಲಾಗಿತ್ತು.