ಮಂಗಳೂರು, ಅ.29 (DaijiworldNews/HR): ರಾಜ್ಯದ ಕರಾವಳಿಯಲ್ಲಿ ರೋಬೋಟಿಕ್ಸ್ ಮತ್ತು ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ತಂತ್ರಜ್ಞಾನದ ಮೂಲಕ ಮೀನುಗಾರಿಕೆಯನ್ನು ದೊಡ್ಡ ಆದಾಯದ ಮೂಲವನ್ನಾಗಿ ಬೆಳೆಸಲಾಗುವುದು ಮತ್ತು ಮಂಗಳೂರಿನಲ್ಲಿ ಸಾಫ್ಟ್ ವೇರ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಐಟಿ-ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರಾದ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಹೇಳಿದರು.
ಶುಕ್ರವಾರ ನಗರದ ಖಾಸಗಿ ಹೋಟೆಲ್ನಲ್ಲಿ ಬಿಯಾಂಡ್ ಬೆಂಗಳೂರು ಉಪಕ್ರಮದಡಿ ಹಮ್ಮಿಕೊಂಡಿದ್ದ ಒಂದು ದಿನದ ಮಂಗಳೂರು ಟೆಕ್ನೋವಾಂಜಾ ಸಮಾವೇಶದಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡವೂ ಸೇರಿದಂತೆ ರಾಜ್ಯದ ಕರಾವಳಿಯಲ್ಲಿ ಅಪಾರವಾದ ಮತ್ಸ್ಯ ಸಂಪತ್ತಿದೆ. ಸರಕಾರವು ಜೈವಿಕ ಸಂಪನ್ಮೂಲಗಳನ್ನು ಆಧರಿಸಿದ ಆರ್ಥಿಕ ಮೂಲಗಳಲ್ಲಿ (ಬಯೊನಾಮಿಕ್ಸ್) ಗುರುತಿಸಿರುವ ಆದಾಯದ ಐದು ಶಕ್ತಿಗಳಲ್ಲಿ ಮೀನುಗಾರಿಕೆಯೂ ಒಂದಾಗಿದೆ. ಇದನ್ನು ಆದಾಯದ ದೊಡ್ಡ ವಲಯವಾಗಿ ಬೆಳೆಸಲು ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಇದಲ್ಲದೆ, ಕಿಯೋನಿಕ್ಸ್ ವತಿಯಿಂದ ಮಂಗಳೂರಿನಲ್ಲಿ ಸಾಫ್ಟ್ವೇರ್ ಪಾರ್ಕನ್ನು ಸ್ಥಾಪಿಸಲಾಗುವುದು. ಇದಕ್ಕೆ ಬೇಕಾದ ತಾಂತ್ರಿಕ ಅನುಮತಿ ಈಗಾಗಲೇ ಸಿಕ್ಕಿದ್ದು, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಅಡಿಯಲ್ಲಿ `ಎಲಿವೇಟ್’ ಕಾರ್ಯಕ್ರಮದ ಅನ್ವಯ ಮಂಗಳೂರು ಕ್ಲಸ್ಟರ್ ಗೆ ವಿಶೇಷ ನಿಧಿಯನ್ನು ಕೊಡಲಾಗುವುದು. ಜತೆಗೆ, ಮಂಗಳೂರಿನಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ಆರ್ಥಿಕ ಸೇವೆಗಳನ್ನು (ಫಿನ್-ಟೆಕ್) ಒದಗಿಸುವ ಉತ್ಕಂಷ್ಟತಾ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಸಚಿವರು ಘೋಷಿಸಿದರು.
ರಾಜ್ಯದಲ್ಲಿ ಉದ್ದಿಮೆಗಳ ಬೆಳವಣಿಗೆಗೆ ದೂರಸಂಪರ್ಕ ಮತ್ತು ಅಂತರ್ಜಾಲ ಸೇವೆಗಳು ಅಡೆತಡೆ ಇಲ್ಲದೆ ನಡೆಯಬೇಕು. ಇದನ್ನು ಪರಿಗಣಿಸಿ, ಸದ್ಯದಲ್ಲೇ ಟೆಲಿಕಾಂ ನೀತಿಯನ್ನು ಜಾರಿಗೆ ತರಲಾಗುತ್ತಿದ್ದು, ಏಕಗವಾಕ್ಷಿ ವ್ಯವಸ್ಥೆ ಪದ್ಧತಿಯನ್ನು ಅಳವಡಿಸಿಕೊಳ್ಳಲಾಗುವುದು. ಅಲ್ಲದೆ ದೂರದ ಪ್ರದೇಶಗಳಲ್ಲಿ ಉಪಗ್ರಹ ಆಧಾರಿತ ಸೇವೆಗಳನ್ನು ಆರಂಭಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಡಿಜಿಟಲ್ ಎಕಾನಮಿ ಮಿಷನ್ ತರಹದ ವಿನೂತನ ಉಪಕ್ರಮವು ಸಿಂಗಪುರ್ ಬಿಟ್ಟರೆ ಇರುವುದು ರಾಜ್ಯದಲ್ಲಿ ಮಾತ್ರ. ವಿಷನ್ ಗ್ರೂಪುಗಳನ್ನು ರಚಿಸಿದ್ದರಲ್ಲೂ ದೇಶಕ್ಕೆ ನಾವೇ ನಂಬರ್ ಒನ್! ಕರ್ನಾಟಕದ ಉದ್ದಗಲಕ್ಕೂ ಉದ್ದಿಮೆಗಳನ್ನು ಬೆಳೆಸಬೇಕೆನ್ನುವುದೇ ಸರಕಾರದ ಪ್ರತಿಜ್ಞೆ ಎಂದವರು ಹೇಳಿದರು.
ಇದೇ ಸಂದರ್ಭದಲ್ಲಿ ಅವರು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಯೋಜನೆಯ ನೂತನ ಕಚೇರಿಯನ್ನು ಮತ್ತು ಫ್ಯೂಚರ್ ಡಿಜಿಟಲ್ ಜಾಬ್ಸ್@ಮಂಗಳೂರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಆನ್ಲೈನ್ ಮೂಲಕ ಶುಭ ಹಾರೈಸಿದ ಉದ್ಯಮಿ ಟಿ.ವಿ. ಮೋಹನದಾಸ್ ಪೈ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ಮೆಡಿಕಲ್ ಕಾಲೇಜುಗಳಿವೆ. ದೇಶದ ಬೇರೆಲ್ಲೂ ಇಂತಹ ಅನುಕೂಲವಿಲ್ಲ. ಮಂಗಳೂರು ಬಿ.ಟಿ. ವಲಯದಲ್ಲಿ ಅಗಾಧವಾಗಿ ಬೆಳೆಯುವ ಸಾಧ್ಯತೆಗಳಿವೆ. ಈ ನಿಟ್ಟಿನಲ್ಲಿ ನಾವು ಮಾರುಕಟ್ಟೆ ಶೋಧನೆಗೆ ಮೊದಲು ಹೆಜ್ಜೆ ಇಡಬೇಕು ಎಂದರು.
ರಾಜ್ಯ ಐಟಿ-ಬಿಟಿ ವಿಷನ್ ಗ್ರೂಪಿನ ಮುಖ್ಯಸ್ಥ ಕ್ರಿಸ್ ಗೋಪಾಕೃಷ್ಣ ಮಾತನಾಡಿ, "ಮಂಗಳೂರನ್ನು ಆರ್ಥಿಕ ಸೇವೆಗಳ ಹಬ್ ಆಗಿ ಬೆಳೆಸಲು ಇಲ್ಲಿನ ಬ್ಯಾಂಕಿಂಗ್ ವಾತಾವರಣ ಹೇಳಿಮಾಡಿಸಿದಂತಿದೆ. ಎಲ್ಲಿಂದಾದರೂ ಕೆಲಸ ಮಾಡಬಹುದು ಎನ್ನುವ ಈಗಿನ ಪರಿಸ್ಥಿತಿಯನ್ನು ನಮ್ಮ ಬೆಳವಣಿಗೆಗೆ ಸಮರ್ಥವಾಗಿ ಬೆಳೆಸಿಕೊಳ್ಳಬೇಕು" ಎಂದಿದ್ದಾರೆ.
ಸಂಸದರಾದ ನಳೀನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ್ ಕಾಮತ್, ಐಟಿಬಿಟಿ ನಿರ್ದೇಶಕಿ ಮೀನಾ ನಾಗರಾಜ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.