ಮಂಗಳೂರು, ನ 04 (DaijiworldNews/MS): ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ತಂದೆ ಮಗ ನೆರೆಮನೆಯ ವ್ಯಕ್ತಿಯೋರ್ವರನ್ನು ಚೂರಿಯಿಂದ ಇರಿದು ಕೊಲೆಗೈದಿರುವ ಘಟನೆ ನ.03 ರ ತಡರಾತ್ರಿ ನಗರದ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ.
ಕೊಲೆ ಆರೋಪಿಗಳಾದ ಅವಿನಾಶ್ ಕಿಣಿ , ಕೃಷ್ಣಾನಂದ ಕಿಣಿ
ಕಾರ್ ಸ್ಟ್ರೀಟ್ ಮಹಾಮ್ಮಾಯಿ ರಸ್ತೆಯಲ್ಲಿರುವ ವೀರ ವೆಂಕಟೇಶ ಅಪಾರ್ಟ್ಮೆಂಟ್ ನಿವಾಸಿ ವಿನಾಯಕ ಕಾಮತ್(44) ಕೊಲೆಯಾದವರು. ಅದೇ ಅಪಾರ್ಟ್ಮೆಂಟ್ ನಿವಾಸಿಗಳಾದ ತಂದೆ ಕೃಷ್ಣಾನಂದ ಕಿಣಿ ಹಾಗೂ ಮಗ ಅವಿನಾಶ್ ಕಿಣಿ ಕೊಲೆ ಆರೋಪಿಗಳು.
4 - 5 ದಿನಗಳ ಹಿಂದೆ ಅಪಾರ್ಟ್ ಮೆಂಟ್ ನ ಮುಂಭಾಗ ಮಂಗಳೂರು ಮನಪಾ ಸಿಮೆಂಟ್ ಹಾಕಿ ಸರಿ ಮಾಡಿದ್ದು ಇದರ ಮೇಲೆ ಬೇರೆಯವರ ಕಾರು ಹೋಗುವ ವಿಚಾರದಲ್ಲಿ ನಮ್ಮ ನೆರೆಮನೆಯವರಾದ ಕೃಷ್ಣಾನಂದ ಕಿಣಿ ಹಾಗೂ ಅವಿನಾಶ್ ಕಿಣಿ ಅವರು ತನ್ನ ಗಂಡನೊಂದಿಗೆ ಜಗಳ ಮಾಡಿದ್ದರು. ನ.03 ರ ರಾತ್ರಿ ಅಪಾರ್ಟ್ ಮೆಂಟ್ ನಲ್ಲಿ ಕೆಲವರು ದೀಪಾವಳಿ ಆಚರಿಸುತ್ತಿದ್ದ ಸಂದರ್ಭ ಗಂಡ ವಿನಾಯಕ್ ಅಪಾರ್ಟ್ಮೆಂಟ್ ಕೆಳಗೆ ಹೋಗಿದ್ದಾರೆ. ಈ ಸಂದರ್ಭ ಪಾರ್ಕಿಂಗ್ ಸ್ಥಳದಲ್ಲಿದ್ದ ಕೃಷ್ಣಾನಂದ ಕಿಣಿ ಹಾಗೂ ಅವಿನಾಶ್ ಕಿಣಿ ಅವರೊಂದಿಗೆ ಜಗಳವಾಡತೊಡಗಿದ್ದು, ಗಲಾಟೆ ಕೇಳಿ ನನ್ನ ಅತ್ತೆಯೂ ಕೆಳಕ್ಕೆ ಹೋದಾಗ ಅವರನ್ನು ತಳ್ಳಿ, ಕೃಷ್ಣಾನಂದ ಕಿಣಿ ತಮ್ಮ ಕೈಯಲ್ಲಿದ್ದ ಚೂರಿನಿಂದ ವಿನಾಯಕ ಕಾಮತ್ ಅವರ ಎದೆಗೆ ಚುಚ್ಚಿದ್ದಾರೆ , ಅವರ ಮಗ ಅವಿನಾಶ್ ಕಿಣಿ ಕೂಡ ದೂಷಿಸುತ್ತಾ ಕೊಲೆಗೆ ಸಹಕರಿಸಿದ್ದಾರೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎಂದು ಮೃತರ ಪತ್ನಿ ಅಮಣಿ ಕಾಮತ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ವಿನಾಯಕ್ ಕಾಮತ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ನ.04 ರ 1.45 ರ ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ದೌಡಾಯಿಸಿದ ಬಂದರು ಠಾಣಾ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದು ತನಿಖೆ ಮುಂದುವರಿದಿದೆ.