ಉಡುಪಿ, ನ. 10 (DaijiworldNews/SM): ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಡವಿದ್ದು, ಈ ಬಗ್ಗೆ ಅಂತಿಮ ನಿರ್ಧಾರವಾಗಿಲ್ಲ. ಒಂದೊಮ್ಮೆ ಸ್ಪರ್ಧಿಸುವುದಾದರೆ, ಸ್ವತಂತ್ರವಾಗಿ ಕಣಕ್ಕಿಳಿಯುವುದಾಗಿ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ನಾನು ಎಲ್ಲಾ ಪಕ್ಷದವರೊಂದಿಗೆ ಗುರುತಿಸಿಕೊಂಡಿದ್ದೇನೆ. ಆದರೆ, ನಾನು ಯಾವುದೇ ಪಕ್ಷಕ್ಕೆ ಸೇರಿಕೊಂಡಿಲ್ಲ. ನನ್ನದು ಸಹಕಾರ ಕ್ಷೇತ್ರ, ಯಾವುದೇ ಪಕ್ಷದಿಂದ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ. ಚುನಾವಣೆಗೆ ಸ್ಪರ್ಧಿಸುವುದಾದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವೆ ಎಂದಿದ್ದಾರೆ.
ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಇಲ್ಲಿಯ ತನಕ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸಹಕಾರ ಸಂಘದ ಸದಸ್ಯರಿಂದ ಚುನಾವಣೆಗೆ ಸ್ಪರ್ಧಿಸಲು ಒತ್ತಡವಿದೆ. ಸಹಕಾರಿ ಕ್ಷೇತ್ರಕ್ಕೆ ಪರಿಷತ್ತಿನಲ್ಲಿ ಒಂದು ಸ್ಥಾನ ಮೀಸಲಿಡಬೇಕು ಎನ್ನುವ ಒತ್ತಯವಿದ್ದು, ಒಂದು ವಾರದೊಳಗೆ ಸ್ಪಷ್ಟ ನಿರ್ಧಾರ ಪ್ರಕಟಿಸಲಾಗುವುದೆಂದು ಅವರು ತಿಳಿಸಿದ್ದಾರೆ.