ಉಡುಪಿ, ನ. 16 (DaijiworldNews/SM): ಕನಿಷ್ಠ ಬೆಂಬಲ ಬೆಲೆಯೊಂದಿಗೆ ರೈತರಿಂದ ಭತ್ತ ಖರೀದಿಗೆ ಸರಕಾರ ಮುಂದಾಗಿದ್ದು, ಅದರಂತೆ ಎಫ್.ಎ.ಕ್ಯೂ ಗುಣಮಟ್ಟದ ಭತ್ತವನ್ನು ನೀಡಲು ಇಚ್ಛೆಯನ್ನು ವ್ಯಕ್ತಪಡಿಸುವ ಜಿಲ್ಲೆಯ ರೈತರಿಂದ ಭತ್ತವನ್ನು ಖರೀದಿಸಲು ನೋಂದಣಿ ಕಾರ್ಯವನ್ನು ಪ್ರಾರಂಭಿಸಲು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.
ನವಂಬರ್ 12ರ ಆದೇಶದಂತೆ ಕೇಂದ್ರ ಸರ್ಕಾರವು 2021-22 ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂಚಿಸಿರುವ ಮಾರ್ಗಸೂಚಿಯನುಸಾರ ಕನಿಷ್ಠ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಗೆ ನಿರ್ಧರಿಸಲಾಗಿದೆ.
ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಭತ್ತವನ್ನು ನೀಡಲು ಇಚ್ಛೆಯನ್ನು ವ್ಯಕ್ತಪಡಿಸುವ ಜಿಲ್ಲೆಯ ರೈತರಿಂದ ಭತ್ತವನ್ನು ಖರೀದಿಸಲು ನೋಂದಣಿ ಕಾರ್ಯವನ್ನು ಕೂಡಲೇ ಪ್ರಾರಂಭಿಸಲಾಗುತ್ತದೆ. ಭತ್ತ ಸಂಗ್ರಹಣಾ ಏಜೆನ್ಸಿಯಾಗಿ ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಯಮಿತದವರನ್ನು ನೇಮಿಸಲಾಗಿದೆ.
2021-22 ನೇ ಸಾಲಿನ ಮುಂಗಾರು ಋತುವಿನಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ಸಾಮಾನ್ಯ ಭತ್ತವನ್ನು ಕ್ವಿಂಟಾಲ್ ಗೆ ರೂ.1,940 ದರದಲ್ಲಿ ಹಾಗೂ ಗ್ರೇಡ್ ಎ ಭತ್ತವನ್ನು ಕ್ವಿಂ.1 ಕ್ಕೆ ರೂ. 1,960 ದರದಲ್ಲಿ ಖರೀದಿಸಲು ಆದೇಶವಾಗಿದೆ.
ರೈತರಿಂದ ಖರೀದಿಸಲಾಗುವ ಆಹಾರ ಧಾನ್ಯಗಳಿಗೆ ಸಂಬಂಧಿಸಿದಂತೆ, ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ “ಶೂಟ್ಸ್" ದತ್ತಾಂಶದಿಂದ ರೈತರ ಮಾಹಿತಿಯನ್ನು ನೇರವಾಗಿ ಪಡೆದು ಕೃಷಿ ಇಲಾಖೆ ಒದಗಿಸಿರುವ ಸರಾಸರಿ ಬೆಳ ಮಾಹಿತಿಯನ್ವಯ ಹಾಗೂ ಸರ್ಕಾರವು ನಿಗಧಿಪಡಿಸಿರುವ ಮಾರ್ಗಸೂಚಿಗಳನ್ವಯ ಕನಿಷ್ಠ ಬೆಂಬಲ ಯೋಜನೆಯಡಿಯಲ್ಲಿ ಪತ್ರವನ್ನು ನೀಡಲು ಇಚ್ಛೆಯನ್ನು ವ್ಯಕ್ತಪಡಿಸುವ ರೈತರ ನೋಂದಣಿ ಪ್ರಕ್ರಿಯೆಯನ್ನು ಸಂಗ್ರಹಣಾ ಏಜೆನ್ಸಿಯಾಗಿರುವ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ರವರಿಂದ ಕೂಡಲೇ ಉಡುಪಿ, ಕಾರ್ಕಳ, ಮತ್ತು ಕುಂದಾಪುರ ತಾಲೂಕುಗಳಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ರೈತರ ನೋಂದಣಿ ಕೇಂದ್ರವನ್ನು ತೆರೆಯಲು ಕ್ರಮವಹಿಸಲಾಗಿದೆ.
ಸ್ಥಳೀಯ ಕೆಂಪು ಭತ್ತವನ್ನು ಬೆಂಬಲ ಬೆಲೆ ಯೋಜನೆಯ ಮಾರ್ಗಸೂಚಿಗೆ ಸೇರ್ಪಡೆಗೊಳಿಸಿ ಖರೀದಿಸುವ ಬಗ್ಗೆ ಸರ್ಕಾರದಿಂದ ನಿರ್ದೇಶನ ಬಂದ ನಂತರ ಕ್ರಮ ವಹಿಸಲಾಗುವುದು.
2021-22 ನೇ ಸಾಲಿನಲ್ಲಿ ಅಕಾಲಿಕ ಮಳೆಯಿಂದಾಗಿ ಪ್ರಾಕೃತಿಕ ವಿಕೋಪದಿಂದ ರೈತರು ಬೆಳೆದಿರುವ ಬೆಳೆಯ ಸ್ಥಳ ಹಾನಿಯಾಗಿರುವುದಾಗಿ ವರದಿಯಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ, ಕಂದಾಯ ಇಲಾಖೆ, ಕೃಷಿ ಇಲಾಖೆ ಮತ್ತು ತೋಟಗಾರಿಕಾ ಇಲಾಖೆಗಳು ಜಂಟಿಯಾಗಿ ಸ್ಥಳ ತನಿಖೆ ನಡೆಸಿ ಪರಿಹಾರ ತಂತ್ರಾಂಶದಲ್ಲಿ ನೋಂದಾಯಿಸಲು ಸೂಚಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.