ಉಡುಪಿ, ನ. 17 (DaijiworldNews/SM): ಕೋವಿಡ್ ಸೋಂಕಿನ ನಿಯಂತ್ರಣಕ್ಕೆ ಕೋವಿಡ್ ನಿರೋಧಕ ಲಸಿಕೆಯೇ ಮದ್ದು, ಇದನ್ನು ಪ್ರತಿಯೊಬ್ಬರಿಗೂ ಮನೆ ಮನೆಗೆ ಭೇಟಿ ನೀಡಿ ನೀಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಲಸಿಕಾ ಕಾರ್ಯಪಡೆಯ ಸಮನ್ವಯ ಸಮಿತಿಯ ಅಧ್ಯಕ್ಷ ಕೂರ್ಮಾರಾವ್ ಎಂ ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಮನೆ ಮನೆ ಭೇಟಿ ಕೋವಿಡ್ ಲಸಿಕಾ ಅಭಿಯಾನ ಅನುಷ್ಠಾನ ಕುರಿತ ಜಿಲ್ಲಾ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ 2,95,375 ಮನೆಗಳಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಪ್ರತಿ ಮನೆಗಳಿಗೆ ಭೇಟಿ ನೀಡಿ, ಕೋವಿಡ್ ನಿರೋಧಕ ಲಸಿಕೆ ಪಡೆಯದೇ ಇರುವವರ ವಿವರವನ್ನು ಪಡೆಯುವುದರ ಜೊತೆಗೆ ಅವರುಗಳು ಲಸಿಕೆ ಪಡೆಯುವಂತೆ ಅರಿವು ಮೂಡಿಸಿ, ಲಸಿಕೆ ನೀಡಬೇಕು ಎಂದರು.
ಲಸಿಕಾ ಕಾರ್ಯಕ್ರಮವು ನವೆಂಬರ್ 16ರಿಂದ ನವೆಂಬರ್ 30ರ ವರೆಗೆ ಜಿಲ್ಲೆಯಾದ್ಯಂತ ನಡೆಯಲಿದ್ದು, ಸಾರ್ವಜನಿಕರು ಹಾಗೂ ಸಮುದಾಯ ಮುಖಂಡರು ಮನೆ ಮನೆ ಭೇಟಿ ಕೋವಿಡ್ ಲಸಿಕಾ ಅಭಿಯಾನಕ್ಕೆ ಸಹಕರಿಸಬೇಕು ಎಂದರು.
ಈ ಅಭಿಯಾನ ಕಾರ್ಯಕ್ರಮಕ್ಕೆ ಎಲ್ಲಾ ಇಲಾಖೆಯವರು ಸಹ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುವುದರೊಂದಿಗೆ, ಅಲೆಮಾರಿಗಳು ಹಾಗೂ ವಲಸಿಗರಿಗೆ ತಪ್ಪದೇ ಲಸಿಕೆಯನ್ನು ನೀಡಬೇಕು ಎಂದರು.
ಮನೆ ಮನೆ ಭೇಟಿ ಸಮಯದಲ್ಲಿ ಸರ್ಕಾರ ನೀಡಿರುವ ನಿಗದಿತ ನಮೂನೆಗಳಲ್ಲಿ ಅವರ ಮಾಹಿತಿಯನ್ನು ಪಡೆಯುವುದರ ಜೊತೆಗೆ ಅವರ ಮೊಬೈಲ್ ಸಂಖ್ಯೆಯನ್ನು ಪಡೆಯಬೇಕು ಎಂದರು.
ಪ್ರತಿ ದಿನ ಕನಿಷ್ಠ 7 ಗ್ರಾಮ ಪಂಚಾಯತಿಗಳನ್ನು ಪ್ರತಿ ತಾಲೂಕು ವ್ಯಾಪ್ತಿಯಲ್ಲಿ ಈ ಸರ್ವೇ ಕಾರ್ಯವನ್ನು 2 ಬಾರಿ ಸಂಪರ್ಕಿಸಬೇಕು. ಇವುಗಳ ಉಸ್ತುವಾರಿಯನ್ನು ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಹಾಗೂ ತಾಲೂಕು ಮಟ್ಟದ ವೈದ್ಯಾಧಿಕಾರಿಗಳು ಮೇಲ್ವಿಚಾರಣೆ ಮಾಡಬೇಕು ಎಂದರು.
ಪ್ರತಿ ಮನೆಯಲ್ಲಿನ 18 ವರ್ಷ ಮೇಲ್ಪಟ್ಟವರು ಮಾಹಿತಿಯನ್ನು ಮತದಾರರ ಪಟ್ಟಿಯಿಂದ ಪಡೆದುಕೊಳ್ಳುವುದು ಸೂಕ್ತ ಎಂದ ಅವರು, ಈ ಅಭಿಯಾನಕ್ಕೆ ಸ್ಥಳೀಯ ಸಂಘ ಸಂಸ್ಥೆಗಳು, ಎನ್.ಜಿ.ಓ ಹಾಗೂ ಯುವಕ ಮಂಡಳಿಯ ಸಹಕಾರ ಪಡೆಯಬೇಕು ಎಂದರು.