ಉಡುಪಿ, ನ. 18 (DaijiworldNews/SM): 2022ನೇ ಜನವರಿ ತಿಂಗಳಲ್ಲಿ ಉಡುಪಿಯಲ್ಲಿ ವಿಶ್ವ ಪ್ರಸಿದ್ಧ ಉಡುಪಿ ಪರ್ಯಾಯ ಮಹೋತ್ಸವ ನಡೆಯಲಿದ್ದು, ಲಕ್ಷಾಂತರ ಮಂದಿ ಈ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ನಿಟ್ಟಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಬೊಮ್ಮಾಯಿಯವರನ್ನು ಭೇಟಿ ಮಾಡಿದ ಶಾಸಕ ರಘುಪತಿ ಭಟ್ ಅವರಿಗೆ ಮನವಿ ಸಲ್ಲಿಸಲಾಯಿತು.
ಉಡುಪಿ ನಗರದ ರಸ್ತೆಗಳ ಅಭಿವೃದ್ಧಿ ಹಾಗೂ ಇನ್ನಿತರ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಉಡುಪಿ ನಗರಸಭೆಗೆ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಶಾಸಕ ಕೆ. ರಘುಪತಿ ಭಟ್ ಅವರು ಉಡುಪಿ ನಗರಸಭೆ ಅಧ್ಯಕ್ಷರು ಹಾಗೂ ಸದಸ್ಯರುಗಳ ನಿಯೋಗದೊಂದಿಗೆ ಮುಖ್ಯಮಂತ್ರಿಯವರಾದ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಮುಖ್ಯಮಂತ್ರಿಯವರು ಪ್ರಸ್ತುತ ಚುನಾವಣಾ ನೀತಿ ಸಂಹಿತೆ ಇರುವುದರಿಂದ ಯಾವುದೇ ಅನುದಾನ ಬಿಡುಗಡೆ ಮಾಡುವಂತಿಲ್ಲ. ಚುನಾವಣಾ ನೀತಿ ಸಂಹಿತೆ ಮುಗಿದ ತಕ್ಷಣ ಉಡುಪಿ ನಗರದ ಅಭಿವೃದ್ಧಿಗೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ವಿಶೇಷ ಅನುದಾನ ನೀಡುವುದಾಗಿ ಭರವಸೆ ನೀಡಿದರು. ಹಾಗೂ ಪರ್ಯಾಯ ಮಹೋತ್ಸವಕ್ಕೆ ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಈ ಸಂದರ್ಭ ಶಾಸಕ ಕೆ. ರಘುಪತಿ ಭಟ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಉಡುಪಿ ಶ್ರೀ ಕೃಷ್ಣ ದೇವರ ಪ್ರಸಾದವನ್ನು ನೀಡಿ ಗೌರವಿಸಿದರು.