ಕಾಪು, ನ.19 (DaijiworldNews/HR): ಮೂರು ಕೃಷಿ ಕಾಯಿದೆಗಳನ್ನು ರದ್ಧುಗೊಳಿಸುವ ಮೂಲಕ ಕೇಂದ್ರ ಸರ್ಕಾರವು ಮೊದಲ ಬಾರಿಗೆ ರೈತ ಪರವಾದ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಇದು ಕಾಂಗ್ರೆಸ್ ಪಕ್ಷ ಸಹಿತ ರಾಜಕೀಯ ಪಕ್ಷಗಳು, ರೈತ ಪರ ಸಂಘಟನೆಗಳು, ರೈತರು ಮತ್ತು ಹೋರಾಟಗಾರರ ಹೋರಾಟಕ್ಕೆ ಸಂದ ಗೆಲುವಾಗಿದೆ" ಎಂದರು.
ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಹುಟ್ಟು ಹಬ್ಬದ ದಿನದಂದೇ ಕೇಂದ್ರ ಸರಕಾರ ರೈತ ವಿರೋಧಿ ಕಾಯ್ದೆಗಳನ್ನು ರದ್ಧುಗೊಳಿಸುವ ಮೂಲಕ ಪ್ರಜಾಪ್ರಭುತ್ವ ರಾಷ್ಟದಲ್ಲಿ ನಾವೆಲ್ಲರೂ ಜೊತೆಗೂಡಿ ನಡೆಸಿದ ಹೋರಾಟಕ್ಕೆ ಗೌರವ ನೀಡಿದೆ" ಎಂದಿದ್ದಾರೆ.
ಇನ್ನು ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮೂರು ಕೃಷಿ ಕಾಯ್ದೆ ರದ್ದುಗೊಳಿಸಿದಕ್ಕೆ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸುತ್ತೇನೆ. ರೈತರ ಬೇಡಿಕೆಯಂತೆ 3 ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದಕ್ಕಾಗಿ ವಂದನೆಗಳು" ಎಂದು ಹೇಳಿದ್ದಾರೆ.