ಮಂಗಳೂರು, ನ 24 (DaijiworldNews/MS): ಸರಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ. ಅಮಿತಾ ಪ್ರಸಾದ್ ಅವರು ನ. 23ರ ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ನ ಎನ್ಐಸಿ ವಿಡಿಯೋ ಸಂವಾದ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ ಇ-ಆಡಳಿತ, ಆಜಾದಿ ಕಾ ಅಮೃತಮಹೋತ್ಸವ, ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಹಾಗೂ ಸ್ಮಾರ್ಟ್ ಸಿಟಿ ಕಾಮಗಾರಿಗಳ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ಅವರು ಅಧಿಕಾರಿಗಳಿಗೆ ನೀಡಿದ ಸಲಹೆ ಸೂಚನೆಗಳು ಇಂತಿವೆ.ಇ-ಸ್ವತ್ತು ಯೋಜನೆಯಡಿಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆನ್ಲೈನ್ ಮೂಲಕ ಕೃಷಿಯೇತರ ಚಟುವಟಿಕೆಗಳಿಗೆ ನೀಡಲಾಗುವ ಫಾರಂ ನಂಬರ್ 9, 11ಎ, 11ಬಿ ಪ್ರಮಾಣಪತ್ರಗಳ ವಿತರಣೆಯಲ್ಲಿ ಎದುರಾಗಿರುವ ಕೆಲವು ನ್ಯೂನತೆಗಳನ್ನು ಸರಿ ಪಡಿಸಿಕೊಳ್ಳಬೇಕು,
ಮುಖ್ಯಮಂತ್ರಿಯವರ ಮಹತ್ವಾಕಾಂಕ್ಷಿಯ ಗ್ರಾಮ ಒನ್ ಯೋಜನೆಯು ಮುಂಬರುವ ಜನವರಿ 26ರೊಳಗೆ ಅನುಷ್ಠಾನ ಆಗಬೇಕು, ಅದಕ್ಕೆ ಕ್ರಮವಾಗಬೇಕು ಎಂದರು.
ವಿವಿಧ ವಿದ್ಯಾರ್ಥಿ ನಿಲಯಗಳ ಅಡುಗೆಮನೆಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಂಸ್ಕರಿಸಿ ಮರು ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಗೋಬರ್ ಗ್ಯಾಸ್ ಪ್ಲಾಂಟ್ ಅಳವಡಿಸಿ, ಅಲ್ಲಿಯೇ ಗೋಬರ್ ಗ್ಯಾಸ್ ಉತ್ಪತ್ತಿ ಮಾಡಿ ಅದನ್ನು ಅಡುಗೆ ಮಾಡಲು ಬಳಸಬಹುದಾಗಿದೆ.
ಅದೇ ರೀತಿ ತ್ಯಾಜ್ಯ ಪ್ಲಾಸ್ಟಿಕ್ ಸಂಗ್ರಹಿಸಿ, ಅದರಿಂದ ಮರು ಬಳಕೆಯ ವಸ್ತುಗಳನ್ನು ಉತ್ಪತಿ ಮಾಡಬಹುದಾದಂತ ಘಟಕಗಳನ್ನು ಅಳವಡಿಸಿ ಅದರ ಲಾಭ ಪಡೆಯಬೇಕು ಎಂದು ಹೇಳಿದರು.
ದೇಶದ ಸ್ವಾತಂತ್ರೋತ್ಸವದ ಅಮೃತಮಹೋತ್ಸವ ಹಿನ್ನಲೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಜಿಲ್ಲೆಯ ನಾಗರೀಕರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
ಸ್ಮಾರ್ಟ್ ಸಿಟಿ ವತಿಯಿಂದ ಮಂಗಳೂರು ನಗರದಲ್ಲಿ ಆಗುತ್ತಿರುವ ಕಾಮಗಾರಿಗಳಿಗೆ ಚುರುಕು ನೀಡಬೇಕು, ದೇಶದ 100 ನಗರಗಳ ಪೈಕಿ ಮಂಗಳೂರು 20ನೇ ಸ್ಥಾನದೊಳಗೆ ಬರಬೇಕು, ಸ್ಮಾರ್ಟ್ ಸಿಟಿಯ ಕಮಾಂಡ್ ಸೆಂಟರ್ ನಲ್ಲಿ ಪೊಲೀಸರ ಸಹಭಾಗಿತ್ವದಲ್ಲಿ ಕಾರ್ಯನಿರ್ವಹಿಸಬೇಕು, ನಗರದಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗುವತ್ತ ಗಮನಹರಿಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಪಂಚಾಯತ್ ಉಪಕಾರ್ಯದರ್ಶಿ ಆನಂದಕುಮಾರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಲ್ಲೇಸ್ವಾಮಿ, ನೆಹರು ಯುವ ಕೇಂದ್ರದ ಅಧಿಕಾರಿ ರಘುವೀರ್, ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನಾಗರಾಜ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.