ಬಂಟ್ವಾಳ, ನ. 24 (DaijiworldNews/SM): ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕಲ್ಲಡ್ಕ ಪೇಟೆಯಲ್ಲಿ ನಿರಂತರವಾಗಿ ಹೆದ್ದಾರಿ ಬ್ಲಾಕ್ ಆಗುತ್ತಿದ್ದು ಸಂಚಾರಕ್ಕೆ ಅಡಚಣೆಯಾಗುತ್ತಿರುವ ಬಗ್ಗೆ ವಾಹನ ಸವಾರರು ಆರೋಪ ವ್ಯಕ್ತಪಡಿಸಿದ್ದಾರೆ.
ಬಿಸಿರೋಡು-ಅಡ್ಡಹೊಳೆವರೆಗೆ ನಡೆಯುತ್ತಿರುವ ಚತುಷ್ಪತ ಕಾಮಗಾರಿಯ ಹಿನ್ನೆಲೆಯಲ್ಲಿ ರಸ್ತೆಯ ಇಕ್ಕೆಲಗಳಲ್ಲಿರುವ ಮರ ಹಾಗೂ ಕಟ್ಟಡಗಳನ್ನು ತೆರವು ಮಾಡುತ್ತಿರುವ ಸಮಯದಲ್ಲಿ ಅನೇಕ ದಿನಗಳಿಂದ ಕಲ್ಲಡ್ಕ ಭಾಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ ಎಂದು ಸವಾರರು ಆರೋಪ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಆಗಿರುವುದರಿಂದ ಈ ರಸ್ತೆಯಲ್ಲಿ ಎಡೆಬಿಡದೆ ವಾಹನಗಳು ಸಂಚಾರ ಮಾಡುತ್ತಿದೆ. ಇಂತಹ ಸಂದರ್ಭಗಳಲ್ಲಿ ಹೆದ್ದಾರಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡ ಕಂಪೆನಿ ವ್ಯವಸ್ಥಿತವಾಗಿ ಕಾಮಗಾರಿಯನ್ನು ಮಾಡಬೇಕಾದ ಅನಿವಾರ್ಯತೆ ಇದೆ ಎಂಬುದು ಸ್ಥಳೀಯರ ಮಾತು.
ಕಾಮಾಗಾರಿ ನಡೆಯುವಾಗ ತೊಂದರೆಗಳು ಉಂಟಾಗುವುದು ಸಹಜ ಆದರೆ ಸಾರ್ವಜನಿಕರಿಗೆ ನಿರಂತರವಾಗಿ ತೊಂದರೆ ನೀಡುವುದು ಕೂಡ ಸರಿಯಲ್ಲ ಎಂಬ ಮಾತುಗಳು ಕೂಡ ಕೇಳಿ ಬಂದಿವೆ.
ಪ್ರತಿ ದಿನ ಬೆಳಿಗ್ಗೆಯಿಂದ ಸಂಜೆವರೆಗೆ ಈ ಭಾಗದಲ್ಲಿ ಸಂಚಾರಕ್ಕೆ ಅಡಚಣೆಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಇದರಿಂದಾಗಿ ಶಾಲಾ ಮಕ್ಕಳಿಗೆ ಹಾಗೂ ಕಚೇರಿಗಳಿಗೆ ಸಮಯಕ್ಕೆ ಸರಿಯಾಗಿ ತಲುಪಲು ಸಾಧ್ಯವಾಗುತ್ತಿಲ್ಲ ಎಂಬ ದೂರುಗಳಿವೆ. ರಜಾ ದಿನಗಳಲ್ಲಿ ಅಥವಾ ಪೀಕ್ ಅವರುಗಳಲ್ಲಿ ಮರಕಡಿಯುವ ಕೆಲಸ ಮಾಡಿದರೆ ಉತ್ತಮ ಎಂಬ ಮಾತುಗಳು ಕೇಳಿ ಬರುತ್ತಿದೆ.