ಉಡುಪಿ, ಡಿ.03 (DaijiworldNews/PY): ಕರಾವಳಿ ಪ್ರವಾಸದಲ್ಲಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದು, ಶ್ರೀ ಕೃಷ್ಣನ ದರ್ಶನ ಪಡೆದಿದ್ದಾರೆ.
ಬಳಿಕ ರಾಜ್ಯಪಾಲರಿಗೆ ಕಡೆಗೋಲು ಶ್ರೀಕೃಷ್ಣ ವಿಶೇಷ ದರ್ಶನ ಮಾಡಿಸಲಾಯಿತು. ದರ್ಶನದ ಬಳಿಕ ಪರ್ಯಾಯ ಈಶಪ್ರಿಯ ತೀರ್ಥಶ್ರೀಪಾದರ ಭೇಟಿಯಾದ ರಾಜ್ಯಪಾಲರು, ಮಠದೊಳಗೆ ಸಮಾಲೋಚನೆ ನಡೆಸಿದರು.
ಈ ವೇಳೆ ಪರ್ಯಾಯ ಅದಮಾರು ಮಠದಿಂದ ರಾಜ್ಯಪಾಲರಿಗೆ ಗೌರವ ಸಲ್ಲಿಸಲಾಯಿತು.
ಈ ಸಂದರ್ಭ ಶಾಸಕ ರಘುಪತಿ ಭಟ್, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದಾರೆ.
ಇಂದು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ರಾಜ್ಯಪಾಲರು 9.45 ಕ್ಕೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದು, ನಂತರ ಮುರುಡೇಶ್ವರಕ್ಕೆ ತೆರಳಲಿದ್ದಾರೆ.
ಡಿ.2ರ ಗುರುವಾರ ಬೆಂಗಳೂರಿನಿಂದ ವಿಮಾನ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಧರ್ಮಸ್ಥಳಕ್ಕೆ ತೆರಳಿದ್ದರು. ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವಿರೇಂದ್ರ ಹೆಗ್ಗಡೆಯವರ ಬೀಡು ನಿವಾಸಕ್ಕೆ ಭೇಟಿ ನೀಡಿದ್ದು, ಬಳಿಕ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ. ನಂತರ ಲಕ್ಷ ದೀಪೋತ್ಸವದ ಸಂದರ್ಭದಲ್ಲಿ ಆಯೋಜಿಸಲಾಗಿರುವ ಸರ್ವಧರ್ಮ ಸಮ್ಮೇಳನವನ್ನು ಉದ್ಘಾಟಿಸಿದ್ದರು.