ಮಂಗಳೂರು, ಡಿ.11 (DaijiworldNews/HR): ನೈತಿಕ ಪೊಲೀಸ್ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಶನಿವಾರದಂದು ಬಂಧಿಸಿದ್ದಾರೆ.
ಬಂಧಿತರನ್ನು ಪ್ರಕಾಶ್, ರಂಜಿತ್, ರಾಘವೇಂದ್ರ ಮತ್ತು ಪವನ್ ಎಂದು ಗುರುತಿಸಲಾಗಿದೆ.
ಮಂಗಳೂರು ಹೊರವಲಯದ ಕಾಲೇಜೊಂದರ, ಉಡುಪಿಯ ನಿವಾಸಿ ವಿದ್ಯಾರ್ಥಿನಿ ಮತ್ತು ಶಿವಮೊಗ್ಗ ಮೂಲದ ಅನ್ಯಕೋಮಿನ ವಿದ್ಯಾರ್ಥಿ ಜತೆಯಾಗಿ ಉಡುಪಿ ಕಡೆಗೆ ಹೊರಟಿದ್ದು ಬಸ್ ನಲ್ಲಿ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದರು ಎಂದು ಆಕ್ಷೇಪಿಸಿ ಸಾರ್ವಜನಿಕರು ಗದರಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಪ್ರಕರಣಕ್ಕೆ ಸಂಬಂಧಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಈ ಪ್ರಕರಣದಲ್ಲಿ 5-6 ವ್ಯಕ್ತಿಗಳು ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಇಂದು ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದರು.