ಉಪ್ಪಿನಂಗಡಿ, ಡಿ 15 (DaijiworldNews/MS): ಉಪ್ಪಿನಂಗಡಿ ಹಳೆ ಗೇಟ್ ಬಳಿ ಹಿಂದೂ ಕಾರ್ಯಕರ್ತನ ಮೇಲೆ ನಡೆದ ತಲ್ವಾರ್ ದಾಳಿಗೆ ಸಂಬಂಧಿಸಿ ವಿಚಾರಣೆಗಾಗಿ ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದ ಮೂವರು ಪಿಎಫ್ಐ ಮುಖಂಡರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಪಿಎಫ್ಐ ಕಾರ್ಯಕರ್ತರು ಠಾಣೆಯ ಮುಂದೆ ಜಮಾಯಿಸಿ ರಸ್ತೆ ತಡೆ ನಡೆಸಿದರಲ್ಲದೆ, ರಸ್ತೆಯಲ್ಲೇ ಡಿ.೧೪ ರ ಮಂಗಳವಾರ ನಮಾಜ್ ನಿರ್ವಹಿಸಿದ ಘಟನೆ ನಡೆಯಿತು.
ಸದ್ಯ ಉಪ್ಪಿನಂಗಡಿ ಬೂದಿ ಮುಚ್ಚಿದ ಕೆಂಡವಾಗಿದ್ದು, ಠಾಣೆಗೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ತಡೆಯಲು ಯತ್ನಿಸಿದ ಸಂದರ್ಭದಲ್ಲಿ ಬಂದೋಬಸ್ತ್ ಗೆ ತೆರಳಿದ ಬಂಟ್ವಾಳ ಎಸ್.ಐ ಪ್ರಸನ್ನ ಅವರ ಮೇಲೆ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿದ್ದು ಇವರೊಂದಿಗೆ ಪೊಲೀಸ್ ಇನ್ಸ್ ಪೆಕ್ಟರ್ ಉಮೇಶ್ , ಎಸ್ .ಐ ವಾಮನ ಕುಟ್ಟಿ, ಹಾಗು ಹಲವು ಸಿಬ್ಬಂದಿಗಳಿಗೆ ಗಾಯಗಳಾಗಿದ್ದು, ಬೇರೆ ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೊಂದೆಡೆ ಪೊಲೀಸರ ಏಟಿನಿಂದ ಗಾಯಗೊಂಡಿರುವುದಾಗಿ 10 ಮಂದಿ ಪಿ.ಎಫ್ .ಐ ಕಾರ್ಯಕರ್ತರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಸಂಜೆ ವೇಳೆ ಬಳಿಕ ವಶಕ್ಕೆ ಪಡೆದುಕೊಂಡವರನ್ನು ಬಿಡುಗಡೆಗೊಳಿಸುತ್ತೇವೆ ಎಂದು ಪೊಲೀಸರು ಭರವಸೆ ನೀಡಿದ್ದರಿಂದ ಪ್ರತಿಭಟನಾಕಾರರು ಸ್ಥಳದಿಂದ ಮೊದಲು ತೆರಳಿದ್ದರು. ಆದರೆ ರಾತ್ರಿ ವೇಳೆ ಮತ್ತಿಬ್ಬರು ಆರೋಪಿಗಳನ್ನು ಬಿಡುಗಡೆಗೊಳಿಸಲು ಆಗ್ರಹಿಸಿ ಜನ ಗುಂಪುಗೂಡತೊಡಗಿದರು. ಈ ವೇಳೆ, ಪೊಲೀಸರು ಜನರನ್ನು ಚದುರಿಸಲು ಲಾಠಿ ಚಾರ್ಜ್ ನಡೆಸಿದರು.
ಪಿಎಫ್ಐನ ಉಪ್ಪಿನಂಗಡಿ ಜಿಲ್ಲಾ ಸಮಿತಿ ಅಧ್ಯಕ್ಷ ಅಬ್ದುಲ್ ಹಮೀದ್ ಮೆಜೆಸ್ಟಿಕ್, ಎಸ್ಡಿಪಿಐ ನೆಕ್ಕಿಲಾಡಿ ಗ್ರಾಮ ಸಮಿತಿ ಅಧ್ಯಕ್ಷ ಝಕಾರಿಯಾ ಕೊಡಿಪ್ಪಾಡಿ ಹಾಗೂ ಉಪ್ಪಿನಂಗಡಿ ಬ್ಲಾಕ್ ಸಮಿತಿ ಅಧ್ಯಕ್ಷ ಮುಸ್ತಾಫ ಲತೀಫಿ ಅವರನ್ನು ತಲವಾರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದರು.
ಘಟನೆ ನಡೆದ ನಂತರ ಮಂಗಳವಾರ ರಾತ್ರಿಯಿಂದ ಉಪ್ಪಿನಂಗಡಿ ಪ್ರದೇಶದಲ್ಲಿ ಸೆಕ್ಷನ್ 144ರಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇನ್ನು ಆಸ್ಪತ್ರೆಗೆ ದಾಖಲಾದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಸುತ್ತ ಪೊಲೀಸ್ ಕಾವಲು ವ್ಯವಸ್ಥೆ ಮಾಡಲಾಗಿದೆ.