ಮಂಗಳೂರು, ಡಿ.17 (DaijiworldNews/SM): ಉಪ್ಪಿನಂಗಡಿಯಲ್ಲಿ ಲಾಠಿಚಾರ್ಜ್ ಖಂಡಿಸಿ ಪಿಎಫ್ ಐ ಬೃಹತ್ ಪ್ರತಿಭಟನೆ ನಡೆಸಿದ್ದು, ಲಾಠಿಚಾರ್ಜ್ ನಡೆಸಿದ ಪೊಲೀಸರನ್ನು ಅಮಾನತುಗೊಳಿಸಬೇಕು ಹಾಗೂ ಠಾಣೆಗೆ ಹಾನಿಗೊಳಿಸಿದ ನೈಜ ಆರೋಪಿಗಳನ್ನು ಪತ್ತೆ ಹಚ್ಚಬೇಕೆಂದು ಧರಣಿ ನಿರತರು ಆಗ್ರಹಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಾಣೆಯವರಿಗೆ ಮನವಿ ಸಲ್ಲಿಸಿದ್ದಾರೆ.
ಮಂಗಳೂರಿನ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿ ಉಪ್ಪಿನಂಗಡಿಯಲ್ಲಿ ನಡೆದ ಲಾಠಿಚಾರ್ಜ್ ಘಟನೆಯನ್ನು ಖಂಡಿಸಿದರು. ಅಲ್ಲದೆ, ವಿವಿಧ ಘೊಷಣೆಗಳನ್ನು ಕೂಗಿದರು. ಪ್ರತಿಭಟನೆಯ ಬಳಿಕ ಎಸ್ ಪಿ ಕಚೇರಿಗೆ ಚಲೋ ರ್ಯಾಲಿಗೂ ಕೂಡ ಸಂಘಟನೆ ಸಿದ್ಧತೆ ನಡೆಸಿತ್ತು. ಆದರೆ, ಪೊಲೀಸ್ ಇಲಾಖೆ ಪ್ರತಿಭಟನೆಗೆ ಅನುಮತಿ ನಿರಾಕರಿಸಿತ್ತು.
ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಆಗಮಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದು, ಅದರಂತೆ ವರಿಷ್ಠಾಧಿಕಾರಿಯವರು ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಮನವಿ ಆಲಿಸಿ ಸ್ವೀಕರಿಸಿದರು.
ಬಳಿಕ ಮಾತನಾಡಿದ ಎಸ್ಪಿಯವರು, ಪ್ರತಿಭಟನಾಕಾರರು ಸಲ್ಲಿಸಿದ ಮನವಿಯನ್ನು ಪರಿಶೀಲಿಸಲಾಗುವುದು. ಶೀಘ್ರದಲ್ಲೇ ಪ್ರಕರಣದ ಸಂಪೂರ್ಣ ಮಾಹಿತಿ ಹೊರಹಾಕಲಾಗುವುದೆಂದು ಅವರು ಸ್ಪಷ್ಟಪಡಿಸಿದರು.