ಕುಂದಾಪುರ, ಡಿ. 28 (DaijiworldNews/HR): ಸೋಮವಾರ ತಡ ರಾತ್ರಿಯವರೆಗೂ ಮೆಹೆಂದಿ ಕಾರ್ಯಕ್ರಮ ನಡೆಯುತ್ತಿದ್ದ ಬ್ರಹ್ಮಾವರ ತಾಲೂಕಿನ ಕೋಟೆತಟ್ಟು ಬಾರಿಕೆರೆ ಕೊರಗ ಸಮುದಾಯದ ವ್ಯಕ್ತಿಯೊಬ್ಬರ ಮನೆಗೆ ಕೋಟ ಪೊಲೀಸರು ಭೇಟಿ ನೀಡಿ ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಮೆಹಂದಿ ಕಾರ್ಯಕ್ರಮದಲ್ಲಿ ತಡರಾತ್ರಿಯವರೆಗೆ ಡಿಜೆ ಅಳವಡಿಸಲಾಗಿತ್ತು ಎಂದು ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪೊಲೀಸರು ಸ್ಥಳಕ್ಕಾಗಮಿಸಿ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.
ಇನ್ನು ಮದುಮಗನ ಮೇಲೂ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಮನೆಯವರು ಆರೋಪಿಸಿದ್ದು, ಜತೆಗೆ ಪೊಲೀಸರು ತಮ್ಮನ್ನು ಠಾಣೆಗೆ ಕರೆದೊಯ್ದು ಬಟ್ಟೆ ತೆಗೆದು ಥಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಘಟನಾ ಸ್ಥಳಕ್ಕೆ ಕೊರಗ ಸಮಾಜದ ಮುಖಂಡರು ಭೇಟಿ ನೀಡಿದ್ದು, ಡಿಜೆ ಶಬ್ದದಿಂದ ಸ್ಥಳೀಯರಿಗೆ ಕಿರಿಕಿರಿ ಉಂಟಾಗಿದ್ದರಿಂದ ಕ್ರಮ ಕೈಗೊಳ್ಳಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಉಡುಪಿ ಜಿಲ್ಲಾಧ್ಯಕ್ಷ ಯಾಸೀನ್ ಕೋಡಿಬೆಂಗ್ರೆ, ದಲಿತ ಮುಖಂಡ ಸುಂದರ್ ಮಾಸ್ತರ್ ಮತ್ತಿತರ ಮುಖಂಡರು ಈ ವಿಷಯವನ್ನು ಖಂಡಿಸಿ ಪೊಲೀಸ್ ಪೇದೆಯನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದ್ದಾರೆ.