ಮಂಗಳೂರು, ಜ 26 (DaijiworldNews/KP): ಕಮ್ಯುನಿಸ್ಟ್ ಹಾಗೂ ಮತ್ತು ಕಾಂಗ್ರೆಸ್ ಪಕ್ಷಗಳು ಬಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಆರೋಪಿಸಿದರು.
ನೆಹರೂ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾರಾಯಣ ಗುರುಗಳು ಜಾತಿ ಅಥವಾ ವ್ಯವಸ್ಥೆಗೆ ಸೀಮಿತವಾಗಿಲ್ಲ, ಅವರು ಇದೆಲ್ಲದಕ್ಕಿಂತ ಮಿಗಿಲಾದವರು. ಅಂದು ಲೇಡಿಹಿಲ್ ವೃತ್ತಕ್ಕೆ ನಾರಾಯಣ ಗುರುವಿನ ಹೆಸರಿಡುವಾಗ ಕಾಂಗ್ರೆಸ್ ವಿರೋಧಿಸಿತ್ತು, ಆದರೆ ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ನಾಯಕರು ನಾರಾಯಣ ಗುರು ಅವರ ಹೆಸರನ್ನು ರಾಜಕೀಯಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಶ್ರೇಷ್ಠ ವ್ಯಕ್ತಿಯ ಹೆಸರಿಗೆ ಧಕ್ಕೆ ಬರುವ ಚಟುವಟಿಕೆಯಲ್ಲಿ ತೊಡಗಿಕೊಳ್ಳಬಾರದು ಎಂದರು.
ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೆ ಮೊದಲ ಬಾರಿಗೆ ಮಾತನಾಡಿದ ಅವರು, ‘ದಕ್ಷಿಣ ಕನ್ನಡದ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ತುಂಬು ಹೃದಯದಿಂದ ಸ್ವೀಕರಿಸುತ್ತೇನೆ’. ದಕ್ಷಿಣ ಕನ್ನಡದ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕರ ಜತೆಗೂಡಿಸಿ ಕೆಲಸ ಮಾಡುತ್ತೇವೆ ಎಂದರು.
ನಾರಾಯಣ ಗುರು ಟ್ಯಾಬ್ಲೋ ವಿಚಾರವಾಗಿ ಕೇರಳದಲ್ಲಿ ಹೊತ್ತಿಕೊಂಡ ಬೆಂಕಿಯ ಲಾಭವನ್ನು ಕಾಂಗ್ರೆಸ್ ಬಳಸಿಕೊಳ್ಳುತ್ತಿದ್ದು, ಇವರ ತಪ್ಪಿನಿಂದಾಗಿ ಜನರಲ್ಲಿ ಗೊಂದಲ ಮೂಡಿದೆ. ಇದು ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ರು ನಾರಾಯಣ ಗುರುಗಳಿಗೆ ಮಾಡಿದ ಅವಮಾನ ಅಲ್ಲವೇ? ಎಂದು ಪ್ರಶ್ನಿಸಿದರು.
ಇನ್ನು ಬಿಜೆಪಿ ಸಚಿವರು, ಸಂಸದರು ತಮ್ಮ ಪಕ್ಷಕ್ಕೆ ಸೇರುತ್ತಿದ್ದಾರೆ ಎಂದು ಕಾಂಗ್ರೆಸ್ ಹೇಳುತ್ತಲೇ ಇದೆ ಆದರೆ ಅವರ ಹೆಸರನ್ನು ಮಾತ್ರ ಹೇಳಲಾಗುತಿಲ್ಲ, ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಹೇಗೆ ಸೋಲಿಸಲಾಗಿದೆ ಎಂಬುದನ್ನು ನೋಡಿದ್ದೇವೆ, ಹಾಗೆಯೇ ಮುಂಬರುವ ಬಿಬಿಎಂಪಿ ಹಾಗೂ ನಾಲ್ಕು ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ನ ಪರಿಸ್ಥಿತಿ ಹೇಗಿರುತ್ತದೆ ಎಂಬುದನ್ನು ನೋಡಬಹುದು ಎಂದರು.