ಗಂಗೊಳ್ಳಿ, ಫೆ 07 (DaijiworldNews/HR): ಗಂಗೊಳ್ಳಿಯ ಕಾಲೇಜಿನಲ್ಲಿ ಹಿಜಾಬ್ ವಿವಾದ ಮತ್ತೆ ಭುಗಿಲೆದ್ದಿದ್ದು, ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶಿಸಲು ನಿರಾಕರಿಸಿದ ಘಟನೆ ಸೋಮವಾರ ನಡೆದಿದೆ.
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಹಿಜಾಬ್ ವಿವಾದದ ಕುರಿತಂತೆ ಕೈಗೊಂಡ ನಿರ್ಣಯವನ್ನು ಮತ್ತು ರಾಜ್ಯ ಸರಕಾರ ಆದೇಶವನ್ನು ಧಿಕ್ಕರಿಸಿ ಸೋಮವಾರ ಬೆಳಿಗ್ಗೆ ಬುರ್ಖಾ ಸಹಿತ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗಿರುವುದು ಮತ್ತೆ ವಿವಾದಕ್ಕೆ ಕಾರಣವಾಯಿತು. ಇದರಿಂದ ಕಾಲೇಜಿನಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡು ಪ್ರಾಂಶುಪಾಲರು ಮತ್ತು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯಿತು.
ಸೋಮವಾರ ಬೆಳಿಗ್ಗೆ ಕೆಲ ವಿದ್ಯಾರ್ಥಿನಿಯರು ಬುರ್ಖಾ ಸಹಿತ ಹಿಜಾಬ್ ಧರಿಸಿ ತರಗತಿಯಲ್ಲಿ ಕುಳಿತುಕೊಂಡಿರುವುದನ್ನು ವಿರೋಧಿಸಿ ಹಿಂದು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸಲು ಮುಂದಾದರು. ಇದೇ ಸಂದರ್ಭ ಹಿಜಾಬ್ ಧರಿಸಿ ತರಗತಿಯಲ್ಲಿ ಕುಳಿತುಕೊಂಡಿದ್ದ ವಿದ್ಯಾರ್ಥಿನಿಯರಿಗೆ ಹಿಜಾಬ್ ತೆಗೆದು ಬರುವಂತೆ ಕಾಲೇಜಿನ ಪ್ರಾಂಶುಪಾಲರು ಖಡಕ್ ಸೂಚನೆ ನೀಡಿದರು. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿನಿಯರು ಹಿಜಾಬ್ ತೆಗೆಯಲು ನಿರಾಕರಿಸಿದರು. ಅನ್ಯಕೋಮಿನ ವಿದ್ಯಾರ್ಥಿಗಳು ಕೂಡ ಪ್ರಾಂಶುಪಾಲರ ಆದೇಶವನ್ನು ಧಿಕ್ಕರಿಸಿ ಕಾಲೇಜಿನ ವಠಾರದಲ್ಲಿ ತರಗತಿ ಬಹಿಷ್ಕರಿಸಿ ಹಿಜಾಬ್ ಪರವಾಗಿ ಪ್ರತಿಭಟನೆ ನಡೆಸಿದರು.
ಸರಕಾರದ ಆದೇಶದಂತೆ ಕಾಲೇಜಿನ ಆಡಳಿತ ಮಂಡಳಿ ನಿರ್ಣಯದಂತೆ ಶಾಲಾ ಸಮವಸ್ತ್ರ ಧರಿಸುವುದು ಕಡ್ಡಾಯ. ಸರಕಾರದ ಆದೇಶವನ್ನು ಮೀರಿ ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ಬಂದರೆ ತರಗತಿಗೆ ಪ್ರವೇಶಿಸಲು ಅನುಮತಿ ನೀಡಲಾಗುವುದಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಸರಕಾರದ ಆದೇಶ ಪಾಲಿಸಬೇಕು ಎಂದು ಕಾಲೇಜಿನ ಪ್ರಾಂಶುಪಾಲರು ಸೂಚನೆ ನೀಡಿದರೂ ಅನ್ಯಕೋಮಿನ ವಿದ್ಯಾರ್ಥಿಗಳು ತರಗತಿಗೆ ಹೋಗದೆ ಕಾಲೇಜಿನ ವಠಾರದಲ್ಲಿ ನಿಂತು ಪ್ರತಿಭಟನೆ ಮುಂದುವರೆಸಿದರು. ಪ್ರಾಂಶುಪಾಲರ ಸೂಚನೆಯಂತೆ ಹಿಂದು ವಿದ್ಯಾರ್ಥಿಗಳು ಕೇಸರಿ ಶಾಲು ತೆಗೆದು ತರಗತಿಗೆ ಹಾಜರಾದರು.
ಹಿಜಾಬ್ ವಿವಾದ ಭುಗಿಲೆಳುತ್ತಿದ್ದಂತೆಯೇ ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರೊಂದಿಗೆ ಮಾತುಕತೆ ನಡೆಸಿದ ಸ್ಥಳೀಯ ಜಮಾತ್ನ ಮುಖಂಡರು ಪರಿಸ್ಥಿತಿಯನ್ನು ತಿಳಿಗೊಳಿಸಲು ಯತ್ನಿಸಿದರೂ ಯಾವುದೇ ಫಲ ನೀಡಲಿಲ್ಲ. ವಿದ್ಯಾರ್ಥಿನಿಯರ ಪೋಷಕರ ಜೊತೆ ಸಭೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ನಂಜಾ ನಾಯ್ಕ್ ಕೂಡ ಸರಕಾರದ ಆದೇಶದ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡುವ ಪ್ರಯತ್ನ ನಡೆಸಿದರು.
ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರು ಹಾಗೂ ಅನ್ಯಕೋಮಿನ ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರ ನೀತಿಯನ್ನು ಪಾಲಿಸಬೇಕು. ಇಲ್ಲದಿದ್ದರೆ ತರಗತಿ ಪ್ರವೇಶಿಸಲು ಅನುಮತಿ ನೀಡುವುದಿಲ್ಲ ಎಂದು ಕಾಲೇಜಿನಿಂದ ನೋಟಿಸ್ ನೀಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಕಾಲೇಜಿನಲ್ಲಿ ಯಾವುದೇ ಧರ್ಮದ ಪರ ಸಮವಸ್ತ್ರ ಧರಿಸಲು ಅವಕಾಶವಿಲ್ಲ. ಸರಕಾರದ ಆದೇಶದಂತೆ ಕಾಲೇಜಿನ ಆಡಳಿತ ಮಂಡಳಿ ನಿಗದಿಪಡಿಸಿದ ಸಮವಸ್ತ್ರ ಧರಿಸಿದ ವಿದ್ಯಾರ್ಥಿಗಳಿಗೆ ಮಾತ್ರ ತರಗತಿಗೆ ಹಾಜರಾಗಲು ಅವಕಾಶ ನೀಡಲಾಗುವುದು. ಸಮವಸ್ತ್ರಕ್ಕೆ ಸಂಬಂಧಪಟ್ಟಂತೆ ಕೋರ್ಟ್ ಆದೇಶ ಬಂದ ಮೇಲೆ ಸರಕಾರದ ಆದೇಶದಂತೆ ಮುಂದಿನ ಕ್ರಮಕೈಗೊಳ್ಳಲಾಗುವುದು. ಅಲ್ಲಿಯವರೆಗೆ ವಿದ್ಯಾರ್ಥಿಗಳು ಸರಕಾರದ ಮತ್ತು ಶಾಲಾ ಆಡಳಿತ ಮಂಡಳಿಯ ಆದೇಶವನ್ನು ಉಲ್ಲಂಘಿಸದೆ ಯಥಾಸ್ಥಿತಿ ಕಾಪಾಡಬೇಕೆಂದು ಎಂದು ಶಾಲೆಯ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಹಿಜಾಬ್ ಧರಿಸಿ ಕಾಲೇಜಿಗೆ ಬರಲು ಅವಕಾಶ ನೀಡುವಂತೆ ಅನ್ಯಕೋಮಿನ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದ್ದು, ಶಾಲಾ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ತಮ್ಮ ನಿಲುವಿನಿಂದ ಹಿಂದೆ ಸರಿದಿಲ್ಲ. ಹೀಗಾಗಿ ನಾಳೆ ಪರಿಸ್ಥಿತಿ ಹಾಗೂ ಹೈಕೋರ್ಟ್ ಆದೇಶದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.
ಬೈಂದೂರು ಪೊಲೀಸ್ ವೃತ್ತನಿರೀಕ್ಷಕ ಸಂತೋಷ ಕಾಯ್ಕಿಣಿ ಗಂಗೊಳ್ಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಮುಂಜಾಗ್ರತಾ ಕ್ರಮವಾಗಿ ಕಾಲೇಜಿನ ಸುತ್ತ ಬಿಗು ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು.