ಮಂಗಳೂರು, ಫೆ 09 (DaijiworldNews/KP): ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ವಕೀಲ ಕೆ.ಎಸ್.ಎನ್.ರಾಜೇಶ್ ಭಟ್ ಅವರಿಗೆ ಹೈಕೋಟ್ ಸೋಮವಾರ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿದೆ.
ರಾಜೇಶ್ ತನ್ನ ಕಚೇರಿಯಲ್ಲಿ ಇಂಟರ್ನ್ಶಿಪ್ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ಕಾನೂನು ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ನಗರದ ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿಗಳು ಅಕ್ಟೋಬರ್ 18 ರಂದು ರಾಜೇಶ್ ವಿರುದ್ದ ಪ್ರಕರಣ ದಾಖಲಿಸಿದ್ದರು, ಆದರೆ ಆ ಕ್ಷಣದಿಂದ ರಾಜೇಶ್ ತಲೆಮರೆಸಿಕೊಂಡಿದ್ದು, ಪೊಲೀಸರ ಸಾಕಷ್ಟು ಹುಡುಕಾಟ ನಡೆಸಿದರು ಪತ್ತೆಯಾಗಿರಲಿಲ್ಲ.
ಈ ಮಧ್ಯೆ ಸಂತ್ರಸ್ತಗೆ ದೂರು ನೀಡದಂತೆ ಬೆದರಿಸಿದ ಕಾರಣಕ್ಕಾಗಿ ಉರ್ವ ಪೊಲೀಸ್ ಠಾಣೆಯ ಎಸ್ಸೈ ಸಹಿತ ಇಬ್ಬರನ್ನು ಅಮಾನತು ಮಾಡಲಾಗಿತ್ತು. ಅಲ್ಲದೆ ರಾಜೇಶ್ ಪರಾರಿಯಾಗಲು ಸಹಕರಿಸಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿತ್ತು.
ಈ ಎಲ್ಲಾ ಬೆಳವಣಿಗೆಯ ಮಧ್ಯೆ ಬಾರ್ ಕೌನ್ಸಿಲ್ನಿಂದ ರಾಜೇಶ್ ಅವರ ಸದಸ್ಯತ್ವವನ್ನು ಅಮಾನತುಗೊಳಿಸಿತ್ತು. ಸುಮಾರು ಎರಡು ತಿಂಗಳ ಕಾಲ ತಲೆಮರೆಸಿಕೊಂಡಿದ್ದ ಕಾರಣ ಆತನ ವಿರುದ್ಧ ಪೊಲೀಸರು ಲುಕೌ ಔಟ್ ನೋಟಿಸ್ ಜಾರಿಗೊಳಿಸಿದ್ದರು.
ಆದರೆ ಬಂಧನದಿಂದ ತಪ್ಪಿಸಿಕೊಳ್ಳಲು ರಾಜೇಶ್ ಅವರು ಮಂಗಳೂರು ನ್ಯಾಯಾಲಯ ಮತ್ತು ಬೆಂಗಳೂರು ಹೈಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು, ಆದರೆ ಅರ್ಜಿಯನ್ನು ತಿರಸ್ಕರಿಸಲಾಗಿತ್ತು. ಇದರಿಂದಾಗಿ ಆರೋಪಿ ರಾಜೇಶ್ ಡಿಸೆಂಬರ್ 20ರಂದು ಮಂಗಳೂರು ನ್ಯಾಯಾಲಯಕ್ಕೆ ಶರಣಾಗಿದ್ದರು.
ನ್ಯಾಯಾಲಯದಿಂದಲೇ ಪೊಲೀಸರು ಆತನನ್ನು ಬಂಧಿಸಿದ್ದು, ಆದರೆ ರಾಜೇಶ್ ಅನಾರೋಗ್ಯ ಕಾರಣ ನೀಡಿ ಮೂರು ಬಾರಿ ಆಸ್ಪತ್ರೆಗೆ ದಾಖಲಾಗಿದ್ದ, ಬಳಿಕ ಪೊಲೀಸರು ಆತನನ್ನು ಕಸ್ಟಡಿಗೆ ತೆಗೆದುಕೊಂಡಿದ್ದರು. ಹಾಗೆ ಕೋರ್ಟ್ ರಾಜೇಶ್ಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಇದೀಗಾ ಹೈಕೋಟ್ ಸೋಮವಾರ ರಾಜೇಶ್ಗೆ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿದೆ.