ಮಂಗಳೂರು, ಫೆ 11 (DaijiworldNews/HR): ಸುರತ್ಕಲ್ನ ಎನ್ಐಟಿಕೆ ಬಳಿ ಕಾರ್ಯನಿರ್ವಹಿಸುತ್ತಿರುವ ಟೋಲ್ಗೇಟ್ ತೆರವಿಗೆ ಆಗ್ರಹಿಸಿ ಆಸಿಫ್ ಆಪತ್ಬಾಂಧವರ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ದಿನದ 24 ಗಂಟೆಯೂ ಯಾವುದೇ ವಿರಾಮವಿಲ್ಲದೆ ಪ್ರತಿಭಟನೆ ನಡೆಯುತ್ತಿದೆ.
ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ವಿವಿಧ ಸಂಘಟನೆಗಳ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದು,ಆಸಿಫ್ ಆಪತ್ಬಾಂಧವರು ಗುಂಡಿಯಲ್ಲಿ ನೀರು ತುಂಬಿಸಿ, ಕೆಸರುಗದ್ದೆಯಲ್ಲಿ ಕುಣಿದು ಕುಪ್ಪಳಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ.
ಇಲ್ಲಿನ ಟೋಲ್ಗೇಟ್ ಮುಚ್ಚುವವರೆಗೂ ಪ್ರತಿಭಟನೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಸೋಮವಾರದಿಂದಲೇ ನಡೆಯುತ್ತಿರುವ ಪ್ರತಿಭಟನೆಗೆ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರಿಂದ ಬೆಂಬಲ ವ್ಯಕ್ತವಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಟೋಲ್ಗೇಟ್ ಮುಚ್ಚುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳ ಗಮನ ಸೆಳೆಯುವ ನಿಟ್ಟಿನಲ್ಲಿ ಮತ್ತಷ್ಟು ಸಾಹಸಗಳನ್ನು ಕೈಗೊಳ್ಳುವುದಾಗಿ ಆಸಿಫ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮನವಿ ಪತ್ರ ಸ್ವೀಕರಿಸಬೇಕು ಎಂದು ಆಸೀಫ್ ಒತ್ತಾಯಿಸಿದ್ದು, ಕಿಲೋಮೀಟರ್ ಅಂತರದಲ್ಲಿ ಎರಡು ಟೋಲ್ಗೇಟ್ಗಳ ಅಗತ್ಯವಿಲ್ಲ. ಹೆಚ್ಚಿನ ಸಂಘಟನೆಗಳ ಬೆಂಬಲದೊಂದಿಗೆ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇನ್ನು ಸುರತ್ಕಲ್ ಪೊಲೀಸ್ ನಿರೀಕ್ಷಕ ಚಂದ್ರಪ್ಪ ಸ್ಥಳಕ್ಕೆ ಆಗಮಿಸಿ ಮಾತನಾಡಿ, ಹೆದ್ದಾರಿ ಒಕ್ಕೂಟದ ಇಲಾಖೆಯಿಂದ ಅನುಮತಿ ಮೇರೆಗೆ ಟೋಲ್ ವಸೂಲಿ ಮಾಡಲಾಗುತ್ತದೆ. ಒಕ್ಕೂಟದ ಹೆದ್ದಾರಿ ಇಲಾಖೆ ಮಾತ್ರ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಪ್ರತಿಭಟನಾಕಾರರಿಗೆ ಮನವರಿಕೆ ಮಾಡಿದ್ದಾರೆ.