ಮಂಗಳೂರು, ಫೆ 12 (DaijiworldNews/MS): 'ಈ ವಿವಾದ ಹೇಗೆ ಮತ್ತು ಎಲ್ಲಿಂದ ಹುಟ್ಟಿಕೊಂಡಿತು ಎಂಬುದನ್ನು ವಿವರಿಸುವುದು ತುಂಬಾ ಕಷ್ಟ' ಎಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಅವರು ಹಿಜಾಬ್-ಕೇಸರಿ ಶಾಲು ವಿವಾದದ ಬಗ್ಗೆ ಮಾತನಾಡಿದರು.
ಶನಿವಾರ ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ದೇವೇಗೌಡ , ಈ ವಿಚಾರವಾಗಿ ಎರಡು ಪ್ರಮುಖ ರಾಜಕೀಯ ಪಕ್ಷಗಳು ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಸುರಿಸುತ್ತಿವೆ. ನಾನು ಯಾರ ಮೇಲೂ ಆರೋಪ ಮಾಡುವುದಿಲ್ಲ. ಒಂದಷ್ಟು ಜನ ವಿವಾದ ಸೃಷ್ಟಿಸಲು ಕಾಯುತ್ತಿದ್ದಾರೆ. ಇದರಲ್ಲಿ ರಾಜಕೀಯ ಮೈಲೇಜ್ ಪಡೆಯುವುದು ಅವರ ಲೆಕ್ಕಾಚಾರವಾಗಿದೆ. ನಾನು ಎಂದಿಗೂ ಧರ್ಮದ ಆಧಾರದ ಮೇಲೆ ರಾಜಕೀಯ ಲಾಭ ಪಡೆದಿಲ್ಲ ಎಂದು ಇದೇ ವೇಳೆ ಹೇಳಿದರು.
ಸಮಾಜದಲ್ಲಿ ಶಾಂತಿ ಕೆಡಿಸುವ ಮೂಲಕ ರಾಜಕೀಯ ಲಾಭ ಮಾಡಿಕೊಳ್ಳುವುದನ್ನು ನಾವು ಕಾಣಬಹುದು. ದುರದೃಷ್ಟವಶಾತ್ ಇದು ಕರಾವಳಿ ಭಾಗದಲ್ಲಿ ಹೆಚ್ಚುತ್ತಿದೆ ಎಂದರು.
ಚಾಮುಂಡೇಶ್ವರಿ ಕ್ಷೇತ್ರದಿಂದ ಕುಮಾರಸ್ವಾಮಿ ಏಕೆ ಸ್ಪರ್ಧಿಸಬೇಕು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, " ಕುಮಾರಸ್ವಾಮಿ ಪಕ್ಷದ ಪ್ರಮುಖ ಸ್ಥಾನದಲ್ಲಿದ್ದಾರೆ. ರಾಜ್ಯದಲ್ಲಿ ಪಕ್ಷದಿಂದ ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದು ಹೇಳಲಾಗದು. ಕುಮಾರಸ್ವಾಮಿ ರಾಮನಗರದಿಂದ ದೂರ ಹೋಗಲ್ಲ. ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಖಚಿತವಾಗಿಲ್ಲ ಆದರೆ ಅವರು ರಾಮನಗರ ಜಿಲ್ಲೆಯಿಂದ ದೂರ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.