ಮಂಗಳೂರು, ಫೆ. 15 (DaijiworldNews/SM): ಜಿಲ್ಲೆಯಲ್ಲಿ ಇದೇ ಫೆ.19ರಿಂದ ಕೈಗೊಳ್ಳಲಾಗುತ್ತಿರುವ ಕಡತ ವಿಲೇವಾರಿ ಅಭಿಯಾನದಲ್ಲಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡುವ ಮೂಲಕ ಬಾಕಿ ಇರುವ ಕಡತಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಕಟ್ಟುನಿಟ್ಟಾಗಿ ತಾಕೀತು ಮಾಡಿದರು.
ಅವರು ಫೆ.15ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಈ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಲೇವರಿಗೆ ಬಾಕಿ ಉಳಿದ ಕಡತಗಳನ್ನು ಸರಿಯಾದ ಕ್ರಮದಲ್ಲಿ ವಿಲೇವರಿ ಮಾಡಬೇಕು, ಇದಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳನ್ನು ಗುರುತಿಸಿ, ಗೌರವಿಸಲಾಗುವುದು, ಅಲ್ಲದೇ ಅವರಿಗೆ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಅವರು ಹೇಳಿದರು.
ಇಲಾಖೆಗಳ ಸೇವೆಗಳು ಜಿಲ್ಲಾ, ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ಅರ್ಹರಿಗೆ ನಿಗದಿತ ಕಾಲಮಿತಿಯೊಳಗೆ ತಲುಪಬೇಕು, ಅಧಿಕಾರಿಗಳು ಅರ್ಹರಿಗೆ ತಲುಪುವಂತೆ ಎಚ್ಚರವಹಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಮಾತನಾಡಿ, ವಿಕಲಚೇತನರು, ಹಿರಿಯ ನಾಗರೀಕರು, ವಿಧವೆಯರು, ಎಂಡೋಸಲ್ಫಾನ್ ಪೀಡಿತರು ಸೇರಿದಂತೆ ಅಶಕ್ತರಿಗೆ ಸರ್ಕಾರದಿಂದ ನೀಡಲಾಗುವ ಸವಲತ್ತುಗಳನ್ನು ಶೀಘ್ರವಾಗಿ ತಲುಪಿಸಬೇಕು. ಈ ರೀತಿಯ ಸೇವೆಗಳಿಗಾಗಿ ಬರುವ ಅರ್ಜಿಗಳನ್ನು ತುರ್ತಾಗಿ ವಿಲೇವಾರಿ ಮಾಡುವಂತೆ ಸೂಚಿಸಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. ವಚ್ರ್ಯೂವಲ್ ಮಾಧ್ಯಮದ ಮೂಲಕವೂ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.