ಉಡುಪಿ, ಫೆ 21 (DaijiworldNews/HR): ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಮತ್ತು ಹಾಜಿ ಅಬ್ದುಲ್ಲ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಿಬ್ಬಂದಿಗಳಿಗೆ ಕಳೆದ ಮೂರು ತಿಂಗಳಿಂದ ವೇತನ ನೀಡದ ಹಿನ್ನೆಲೆಯಲ್ಲಿ ಸೋಮವಾರ ಆಸ್ಪತ್ರೆ ಎದುರು ಸಿಬ್ಬಂದಿಗಳು ಪ್ರತಿಭಟನೆ ನಡೆಸಿದ್ಡಾರೆ.
ಒಳರೋಗಿ ಮತ್ತು ಹೊರರೋಗಿ ವಿಭಾಗಗಳೆರಡರಲ್ಲೂ ಚಿಕಿತ್ಸೆಯನ್ನು ಸಂಪೂರ್ಣ ಸ್ಥಗಿತಗೊಳಿಸಿ ಆಸ್ಪತ್ರೆಯ 153 ಸಿಬ್ಬಂದಿಗಳು ಪ್ರತಿಭಟನೆಗೆ ಕುಳಿತಿದ್ದಾರೆ.
ಕಳೆದ ಮೂರು ತಿಂಗಳಿನಿಂದ ಸರಕಾರದಿಂದ ವೇತನ ಬಿಡುಗಡೆಯಾಗಿಲ್ಲ. ಕಳೆದ ಬಾರಿಯೂ ವೇತನಕ್ಕಾಗಿ ಧರಣಿ ಕೂರಿದ್ದೇವೆ. ಇದರಿಂದ ರೋಗಿಗಳಿಗೆ ತೊಂದರೆಯಾಗುತ್ತಿದೆ. ಮ್ಯಾನೆಜ್ಮೆಂಟ್ ಕೂಡ ನಮ್ಮ ಬೇಡಿಕೆಗೆ ಸ್ಪಂದಿಸುತ್ತಿಲ್ಲ. ತುರ್ತು ಚಿಕಿತ್ಸೆಯನ್ನು ಮಾತ್ರ ಪ್ರವೇಶ ಪಡೆಯುತ್ತಿದ್ದು, ಬೇರೆಲ್ಲ ವಿಭಾಗವನ್ನು ಸ್ಥಗಿತ ಗೊಳಿಸಿದ್ದೇವೆ ಎಂದು ಆಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ ಸ್ವರ್ಣಲತಾ ಹೇಳಿದ್ದಾರೆ
ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡ ಅನ್ಸರ್ ಅಹ್ಮದ್ ಮಾತನಾಡಿ, ರಾಜ್ಯದೆಲ್ಲೆಡೆ ಹಿಜಾಬ್ ಬಗ್ಗೆ ಚರ್ಚೆ ಆಗುತ್ತಿದೆ. ಧರ್ಮ ಧರ್ಮ ಗಳ ನಡುವೆ ಎತ್ತಿ ಕಟ್ಟು ಕೆಲಸ ನಡೆಯುತ್ತಿದೆ. ಉಡುಪಿಯ ಶಾಸಕರು ಅದನ್ನು ಬಿಟ್ಟು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಸಿಬ್ಬಂದಿಗಳ ಸಮಸ್ಯೆಗೆ ತಕ್ಷಣ ಸ್ಪಂದಿಸಬೇಕು . ಇಲ್ಲದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆ ಸರಕಾರದ ವಿರುದ್ಧ ಉಗ್ರ ಪ್ರತಿಭಟನೆ ನಡೆಸುತ್ತದೆ ಎಂದು ಎಚ್ಚರಿಸಿದರು.