ಮಂಗಳೂರು, ಫೆ 22 (DaijiworldNews/KP): ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಹತ್ಯೆಯ ನಂತರ ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ಶಾಂತಿ ಕಾಪಾಡಲು ನಾಗರಿಕರು ಪೊಲೀಸರೊಂದಿಗೆ ಸಹಕರಿಸುವಂತೆ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸೋಮವಾರ ಮನವಿ ಮಾಡಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ ಇಡಲಾಗಿದೆ. ಅಧಿಕಾರಿಗಳ ಸಭೆ ನಡೆಸಿ ಠಾಣಾ ಹಂತದಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇತ್ತೀಚೆಗೆ ಕೆಲವು ಕಡೆ ನಡೆದಿದ್ದ ಹಿಜಾಬ್-ಕೇಸರಿ ಶಾಲು ವಿವಾದದ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಪೋಷಕರು, ಆಡಳಿತ ಮಂಡಳಿ ಹಾಗೂ ವಿವಿಧ ಸಂಘಟನೆಗಳು ಸಹಕರಿಸಿದ್ದರಿಂದ ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿರಲಿಲ್ಲ. ಅದೇ ರೀತಿ ಮುಂದೆಯೇ ಎಲ್ಲರ ಶಾಂತಿ ಕಾಪಾಡಲು ಸಹಕಾರಿಸುವಂತೆ ಹೇಳಿದರು.
ಮಂಗಳೂರು ಮುಸ್ಲಿಂ ಎಂಬ ಫೇಸ್ಬುಕ್ ಪೇಜ್ನಲ್ಲಿ ಶಿವಮೊಗ್ಗದಲ್ಲಿ ನಡೆದ ಹರ್ಷ ಕೊಲೆ ಪ್ರಕರಣದ ಕುರಿತು ಆಕ್ಷೇಪಾರ್ಹವಾದ ಪೋಸ್ಟ್ಗಳನ್ನು ಹಾಕಿ ಶಾಂತಿ ಕದಡಲು, ಕೋಮು ಗಲಭೆ ನಡೆಸಲು ಪ್ರಯತ್ನಿಸಿರುವುದು ಗಮನಕ್ಕೆ ಬಂದಿದ್ದು ಈ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದಿದ್ದಾರೆ.
ಇನ್ನು ಈ ಬಗ್ಗೆ ರಾಜ್ಯ ಗುಪ್ತಚರ ಇಲಾಖೆ ಜತೆಗೂ ಸಂವಹನ ನಡೆಸಲಾಗಿದೆ. ಪೋಸ್ಟ್ ಹಾಕಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳ ಮೂಲಕ ವಿಷಬೀಜ ಬಿತ್ತಲು ಅವಕಾಶ ನೀಡುವುದಿಲ್ಲ. ಇಂತಹ ಸುಮಾರು 1,064 ವ್ಯಕ್ತಿ ಅಥವಾ ಸಂಘಟನೆಗಳ ಪೋಸ್ಟ್ಗಳ ಬಗ್ಗೆ ಕಳೆದ 2 ತಿಂಗಳುಗಳಿಂದ ನಿಗಾ ಇರಿಸಲಾಗಿದೆ. ಇದನ್ನು ಪರಿಶೀಲಿಸಲಾಗುತ್ತಿದ್ದು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಪೊಲೀಸ್ ಇಲಾಖೆಯ ವಿವಿಧ ಏಜೆನ್ಸಿಗಳಿಗೂ ಮಾಹಿತಿ ನೀಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಪೋಸ್ಟ್ಗಳನ್ನು ಗಂಭೀರವಾಗಿ ಪರಿಗಣಿಸಲಾಗುತ್ತಿದೆ. ಹಾಗಾಗಿ ಯಾರೂ ಕೂಡ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಬಾರದು. ಕೇವಲ ಪೋಸ್ಟ್ ಮಾಡುವುದು ಮಾತ್ರವಲ್ಲದೆ ಅದನ್ನು ಶೇರ್ ಮಾಡುವುದು, ಲೈಕ್ ಮಾಡುವುದು ಅಥವಾ ಆಕ್ಷೇಪಾರ್ಹವಾಗಿ ಕಮೆಂಟ್ ಹಾಕುವುದು ಕೂಡ ಅಪರಾಧವಾಗುತ್ತದೆ ಎಂದು ಅವರು ತಿಳಿಸಿದರು.
ಇನ್ನು ಮಂಗಳೂರು ಮುಸ್ಲಿಂ ಎಂಬ ಫೇಸ್ಬುಕ್ ಪೇಜ್ನಲ್ಲಿ ಶಿವಮೊಗ್ಗದಲ್ಲಿ ನಡೆದ ಹರ್ಷ ಕೊಲೆ ಪ್ರಕರಣದ ಕುರಿತು ಆಕ್ಷೇಪಾರ್ಹವಾದ ಪೋಸ್ಟ್ ಹಾಕಿರುವವರ ವಿರುದ್ದ ಐಪಿಸಿಯ ಸೆಕ್ಷನ್ 153(ಎ), 505 (ಬಿ), 505 (ಸಿ) ಮತ್ತು ಐಟಿ ಕಾಯ್ದೆಯ 66 (ಸಿ), 66 (ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.