ಮಂಗಳೂರು, ಫೆ 25 (DaijiworldNews/HR): ಉಳ್ಳಾಲದ ಭಾರತ್ ಪಿಯು ಕಾಲೇಜಿನಲ್ಲಿ ಹಿಜಾಬ್ ವಿವಾದ ಮತ್ತೆ ಬುಗಿಲೆದ್ದಿದ್ದು, ನ್ಯಾಯಾಲಯದಿಂದ ತೀರ್ಪು ಬರುವವರೆಗೆ ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಶಿಕ್ಷಣ ಇಲಾಖೆಯ ಆದೇಶದಂತೆ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸದೆ ತರಗತಿಗೆ ಬರುವಂತೆ ಕಾಲೇಜು ಆಡಳಿತ ಸಮಿತಿ ಸೂಚಿಸಿದೆ. ಸಮಿತಿಯ ಆದೇಶವನ್ನು ವಿದ್ಯಾರ್ಥಿಗಳು ವಿರೋಧಿಸಿ ನ್ಯಾಯಾಲಯದ ಅಂತಿಮ ತೀರ್ಪಿನ ನಂತರ ನಾವು ಅನುಸರಿಸುತ್ತೇವೆ ಎಂದು ಹೇಳಿದ್ದಾರೆ.
ಇನ್ನು ವಿದ್ಯಾರ್ಥಿಗಳು ಹಿಜಾಬ್ ಧರಿಸುವುದಾಗಿ ಹಠ ಹಿಡಿದ್ದು, ಪ್ರತಿಭಟನೆ ನಡೆಸಿ ಟಿಸಿ (ವರ್ಗಾವಣೆ ಪ್ರಮಾಣ ಪತ್ರ) ನೀಡುವಂತೆ ಅಥವಾ ತೀರ್ಪು ಹೊರಬೀಳುವವರೆಗೆ ಕಾಲೇಜಿಗೆ ರಜೆ ಘೋಷಿಸುವಂತೆ ಮನವಿ ಮಾಡಿದ್ದಾರೆ.
ಉಳ್ಳಾಲ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು. ಶಾಸಕ ಯು.ಟಿ.ಖಾದರ್ ಕೂಡ ಕಾಲೇಜಿಗೆ ಭೇಟಿ ನೀಡಿ ಕಾಲೇಜು ಆಡಳಿತ ಸಮಿತಿಯೊಂದಿಗೆ ಸಭೆ ನಡೆಸಿದರು.
ಇನ್ನು ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ನ್ಯಾಯಾಲಯದಿಂದ ತೀರ್ಪು ಬರುವವರೆಗೆ ಕಾಲೇಜಿಗೆ ರಜೆ ಘೋಷಿಸಲಾಗಿದೆ.