ನವದೆಹಲಿ, ಮಾ. 15 (DaijiworldNews/SM): ಸಾಕಷ್ಟು ಹೋರಾಟಗಳು ಪ್ರತಿಭಟನೆಯ ಬಳಿಕ ಇದೀಗ ಸುರತ್ಕಲ್ ಟೋಲ್ ಗೇಟನ್ನು ಸ್ಥಳಾಂತರಗೊಳಿಸಿ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಇಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರ ನೇತೃತ್ವದಲ್ಲಿ ಸುರತ್ಕಲ್ ಟೋಲ್ ವಿಚಾರದ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಅಧಿಕಾರಿಗಳೊಂದಿಗೆ ಸಚಿವರ ಕಚೇರಿಯಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಮುಖ್ಯವಾಗಿ ಸುರತ್ಕಲ್ ಟೋಲ್ ಗೇಟ್ ಸ್ಥಳಾಂತರ ಅಥವಾ ವಿಲೀನಗೊಳಿಸುವ ಬಗ್ಗೆ ಚರ್ಚಿಸಲಾಯಿತು. ಅದರಂತೆ ಸಾರ್ವಜನಿಕರಿಗೆ ತುಂಬಾ ಸಮಸ್ಯೆಯಾಗುತ್ತಿರುವ ದೃಷ್ಠಿಯಿಂದ ಸುರತ್ಕಲ್ ಟೋಲ್ ಗೇಟನ್ನು ಸ್ಥಳಾಂತರಿಸಿ ಎನ್.ಎಂ.ಪಿ.ಟಿಯೊಳಗೆ ಸ್ಥಾಪಿಸುವ ನಿರ್ಧಾರಕ್ಕೆ ಬರಲಾಯಿತು. ಎನ್.ಎಂ.ಪಿ.ಟಿಯೊಳಗೆ ಬರುವ ಹಾಗೂ ಹೊರಗೆ ಹೋಗುವ ವಾಹನಗಳಿಂದ ಮಾತ್ರ ಟೋಲ್ ಸಂಗ್ರಹಿಸಲು ಸಚಿವರು ಸೂಚಿಸಿದರು.
ಅಲ್ಲದೇ ` ಮಾಣಿ - ಸಂಪಾಜೆ - ಮಡಿಕೇರಿ ಸಂಪರ್ಕಿಸುವ ರಸ್ತೆಯನ್ನು ಮಾಣಿಯಿಂದ ಸಂಪಾಜೆವರೆಗೆ ಚತುಷ್ಪಥ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಹಾಗೂ ಸಂಪಾಜೆಯಿಂದ ಮಡಿಕೇರಿವರೆಗಿನ ರಸ್ತೆಯನ್ನು ಅಗಲೀಕರಣಗೊಳಿಸುವ ಬಗ್ಗೆ ಸಭೆಯಲ್ಲಿ ಸಚಿವರು ಆದೇಶಿಸಿದರು.