ಮಂಗಳೂರು, ಮೇ 19 (DaijiworldNews/SM): ಜಿಲ್ಲೆಯಾದ್ಯಂತ ಒಟ್ಟು 22 ಕೇಂದ್ರಗಳಲ್ಲಿ ಇದೇ ಮೇ 21 ಹಾಗೂ 22ರಂದು ನಡೆಯಲಿರುವ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ನಿಯೋಜಿತ ಸಿಬ್ಬಂದಿಗಳು ಸನ್ನದ್ಧರಾಗುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ನಿರ್ದೇಶನ ನೀಡಿದರು.
ಅವರು ನಗರದ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಮೇ 19ರ ಗುರುವಾರ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
22 ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಅನುಭವಿಗಳಾಗಿದ್ದಾರೆ. ಈ ರೀತಿಯ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಿರುತ್ತಾರೆ. ಆದರೆ, ಇದೀಗ ನಡೆಯುವ ಪರೀಕ್ಷೆಯ ಸೂಕ್ಷ್ಮತೆಯ ಅರಿವಿರುವುದರಿಂದ ಪರೀಕ್ಷಾ ಕೇಂದ್ರಗಳ ಎಲ್ಲಾ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಅತ್ಯಂತ ಜಾಗರೂಕತೆಯಿಂದ ಸರ್ಕಾರದ ಮಾರ್ಗಸೂಚಿಗಳನ್ವಯ ಕರ್ತವ್ಯ ನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.
575 ಹುದ್ದೆಗಳ ಭರ್ತಿಗೆ ನಡೆಯುತ್ತಿರುವ ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದಂತೆ ಎಚ್ಚರ ವಹಿಸಬೇಕು. ಈಗಾಗಲೇ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರಗಳ ಮಾಹಿತಿ ನೀಡಲಾಗಿದೆ. 22ರ ಪೈಕಿ ಎರಡು ಕೇಂದ್ರಗಳನ್ನು ಹೊರತುಪಡಿಸಿದಂತೆ ಉಳಿದೆಲ್ಲವೂ ಖಾಸಗಿ ಕೇಂದ್ರವಾಗಿರುವುದರಿಂದ 22 ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿ.ಸಿ.ಟಿ.ವಿಯನ್ನು ಅಳವಡಿಸಬೇಕು, ಅದರ ಫೂಟೇಜ್ ಅನ್ನು ಪರಿಶೀಲಿಸಬೇಕು ಹಾಗೂ ಅದರ ದತ್ತಾಂಶವನ್ನು ಸಹ ಸಂಗ್ರಹಿಸಿಟ್ಟುಕೊಳ್ಳಬೇಕು ಎಂದು ತಿಳಿಸಿದರು.
ಪರೀಕ್ಷಾ ವೇಳೆಯಲ್ಲಿ ಯಾವುದೇ ಕಾರಣಕ್ಕೂ ಯಾವುದೇ ರೀತಿಯ ಸಮಸ್ಯೆಗಳು ಉದ್ಬವಿಸಬಾರದು, ಯಾವುದಾರೂ ಲೋಪದೋಷಗಳು ಇದ್ದಲ್ಲಿ ಅವುಗಳನ್ನು ಈಗಲೇ ಬಗೆಹರಿಸಿಕೊಳ್ಳಬೇಕು, ಜಿಲ್ಲಾಧಿಕಾರಿಯವರು ಸೇರಿದಂತೆ ಯಾರೊಬ್ಬರೂ ಕೂಡ ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ತರುವಂತಿಲ್ಲ, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಕೊಠಡಿಯಲ್ಲಿ ಬೆಳಕು, ಫ್ಯಾನ್, ಶೌಚಾಲಯ, ಸಿಸಿಟಿವಿಯ ಕಾರ್ಯನಿರ್ವಹಣೆ ಸೇರಿದಂತೆ ಅಗತ್ಯ ಸೌಕರ್ಯಗಳ ಬಗ್ಗೆ ಪರಿಶೀಲಿಸುವಂತೆ ತಿಳಿಸಿದರು.