ಮಂಗಳೂರು, ಜೂ 29 (DaijiworldNews/DB): ಕೃಷಿ ಪ್ರಧಾನ ದೇಶ ಭಾರತದಲ್ಲಿ ಗೋವಿಗೆ ಪ್ರಮುಖ ಸ್ಥಾನವಿದೆ. ಗೋವುಗಳ ರಕ್ಷಣೆಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಗೋಶಾಲೆ ನಿರ್ಮಾಣ ಕಾರ್ಯ ಆರಂಭಗೊಂಡಿದೆ ಎಂದು ಪಶು ಸಂಗೋಪನಾ ಇಲಾಖೆಯ ಸಚಿವ ಪ್ರಭು ಬಿ. ಚೌಹಾಣ್ ಹೇಳಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಜಿಲ್ಲಾ ಪ್ರಾಣಿ ದಯಾ ಸಂಘ ಮತ್ತು ರಾಮಕುಂಜ ಗ್ರಾಮ ಪಂಚಾಯತ್ ಸಹಯೋಗದಲ್ಲಿ ರಾಮಕುಂಜದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಗೋಶಾಲೆಗೆ ಭೂಮಿ ಪೂಜೆ ನೆರವೇರಿಸಿ ಅವರು ಜೂ.29ರ ಬುಧವಾರ ಮಾತನಾಡಿದರು.
ಮುಂದಿನ ಎರಡು ತಿಂಗಳೊಳಗೆ ಗೋಶಾಲೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸುವಲ್ಲಿ ಶ್ರಮಿಸಬೇಕು. ಗೋಹತ್ಯೆ ನಿಷೇಧ ಕಾನೂನನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗುತ್ತಿದೆ, ಕಾಯ್ದೆಯಡಿ ಇದುವರೆಗೂ 15 ಸಾವಿರ ಹಸುಗಳನ್ನು ರಕ್ಷಿಸಲಾಗಿದ್ದು, 700ಕ್ಕೂ ಹೆಚ್ಚು ಪ್ರಕರಣ ದಾಖಲಿಸಲಾಗಿದೆ. ಪ್ರಾಣಿ ರಕ್ಷಣೆ ಸರ್ಕಾರದ ಉದ್ದೇಶವಾಗಿದೆ. ಗೋಹತ್ಯೆ ನಿಷೇಧ ಕಾನೂನು ಉಲ್ಲಂಘಿಸಿದರೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಅವರು ಹೇಳಿದರು.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪ್ರಾಣಿ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ. ಪ್ರಾಣಿಗಳ ಮಾಲಕರು ಸಹಾಯವಾಣಿಗೆ ಕರೆ ಮಾಡಿದರೆ ಇಲಾಖೆ ವತಿಯಿಂದ ಸಂಪೂರ್ಣ ಮಾಹಿತಿ ನೀಡಲಾಗುತ್ತದೆ, ಇದುವರೆಗೂ ಒಂದು ಲಕ್ಷಕ್ಕೂ ಹೆಚ್ಚು ಕರೆಗಳು ಬಂದಿದ್ದು ಶೇ.75ಕ್ಕೂ ಹೆಚ್ಚಿನ ಪ್ರಕರಣಗಳಿಗೆ ಸ್ಥಳಕ್ಕೆ ತೆರಳಿ ಪ್ರಾಣಿಗಳಿಗೆ ಎದುರಾದ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದರು.
ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲಾ ತಾಲೂಕುಗಳಲ್ಲಿಯೂ ಪಶು ಸಂಜೀವಿನಿ ಆಂಬುಲೆನ್ಸ್ ಕಾರ್ಯನಿರ್ವಹಿಸಲಿದೆ, 1962ಗೆ ಕರೆ ಮಾಡಿದರೆ, ಸ್ಥಳಕ್ಕೆ ಹೋಗಿ ಪಶುಗಳಿಗೆ ಇಲಾಖೆಯ ವೈದ್ಯರು ಹಾಗೂ ಸಿಬ್ಬಂದಿ ಚಿಕಿತ್ಸೆ ನೀಡುವರು, ಶೀಘ್ರದಲ್ಲೆಯೇ ಆತ್ಮನಿರ್ಭರ್ ಭಾರತದಡಿ ಸ್ವಾವಲಂಬಿ ಗೋಶಾಲೆಗಳನ್ನು ಪುನರಾರಂಭಿಸಲಾಗುವುದು ಈಗಾಗಲೇ ಎಲ್ಲಾ ಜಿಲ್ಲೆಗಳಲ್ಲಿ ಗೋಮಾತಾ ಸ್ವ-ಸಹಾಯ ಸಂಘವನ್ನು ರಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಶಾಸಕರಾದ ಸಂಜೀವ ಮಠಂದೂರು ಮಾತನಾಡಿ, ಗೋವು ಹಾಗೂ ಗೋಪಾಲಕರ ರಕ್ಷಣೆಗೆಗಾಗಿ ಸರ್ಕಾರದಿಂದ ಕಾನೂನು ಬಲಪಡಿಸುವ ಕೆಲಸವಾಗುತ್ತಿದೆ. ಸಾವಯವ ಕೃಷಿ-ಪರಂಪರೆ ಉಳಿಸುವ ಕೆಲಸ ಗೋವುಗಳಿಂದ ಆಗಬೇಕಿದೆ ಎಂದರು.
ಮುಖ್ಯ ಅತಿಥಿಗಳಾಗಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಪಶು ಸಂಗೋಪನಾ ಸಚಿವರು ತಮ್ಮ ಇಲಾಖೆಯಲ್ಲಿ ಸಾಕಷ್ಟು ಪರಿವರ್ತನೆಯ ಕೆಲಸ ಮಾಡಿದ್ದಾರೆ, ಸರ್ಕಾರದಲ್ಲಿ ಕೆಲವೊಂದು ಗಟ್ಟಿ ನಿರ್ಣಯ ಕೈಗೊಳ್ಳುವ ಮೂಲಕ ಗೋ ಸಂಸ್ಕೃತಿಯನ್ನು ಉಳಿಸಲಾಗುತ್ತಿದೆ. ಮನುಷ್ಯರಂತೆಯೇ ಪ್ರಾಣಿಗಳಿಗೂ ಆಂಬುಲೆನ್ಸ್ ಸೇವೆ ಒದಗಿಸಿ ಪ್ರಾಣಿಗಳ ರಕ್ಷಣೆಗೆ ಅವರು ಮುಂದಾಗಿದ್ದಾರೆ. ಮುಂದಿನ ಐದಾರು ತಿಂಗಳಲ್ಲಿ ಪುತ್ತೂರಿನಲ್ಲಿ ಪಶು ವೈದ್ಯಕೀಯ ಕಾಲೇಜು ಆರಂಭವಾಗಲಿದೆ. ಗೋಶಾಲೆಗಳಿಗಾಗಿಯೇ ಸರ್ಕಾರ ಐವತ್ತು ಲಕ್ಷ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ಮಾಹಿತಿ ನೀಡಿದರು.
ಪುತ್ತೂರು ಸಹಾಯ ಆಯುಕ್ತ ಗಿರೀಶ್ ನಂದನ್, ತಹಶೀಲ್ದಾರ್ ಅನಂತ ಶಂಕರ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ, ರಾಮಕುಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲತಿ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯ ಹೆಚ್ಚುವರಿ ನಿರ್ದೇಶಕ ಡಾ. ಶ್ರೀನಿವಾಸ್ ಮತ್ತಿರರು ಉಪಸ್ಥಿತರಿದ್ದರು.
ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ.ಪ್ರಸನ್ನ ಕುಮಾರ್ ಸ್ವಾಗತಿಸಿದರು. ಇದಕ್ಕೂ ಮುನ್ನ ಸಚಿವರು ಗೋಪೂಜೆ ನೆರವೇರಿಸಿದರು. ಪಶುವೈದ್ಯಕೀಯ ಕಾಲೇಜು ಹಾಗೂ ರಾಮಕುಂಜದಲ್ಲಿರುವ ಪಶು ಸಂವರ್ಧನಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.