ಬಂಟ್ವಾಳ, ಜು 07 (DaijiworldNews/DB): ಪಂಜಿಕಲ್ಲಿನಲ್ಲಿ ಶೆಡ್ ಮೇಲೆ ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ಕುಮಾರ್ ಮತ್ತು ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಭೇಟಿ ನೀಡಿ ಗುರುವಾರ ಪರಿಶೀಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುನಿಲ್ಕುಮಾರ್, ಘಟನೆ ನಡೆದ ಕೂಡಲೇ ಎಲ್ಲಾ ರಕ್ಷಣಾ ತಂಡಗಳು ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ದುರದೃಷ್ಟವಶಾತ್ ಮೂವರು ಅಸುನೀಗಿದ್ದಾರೆ. ಓರ್ವರನ್ನು ಮಾತ್ರ ಜೀವಂತವಾಗಿ ಉಳಿಸಿಕೊಳ್ಳಲು ಸಾಧ್ಯವಾಯಿತು. ಪ್ರಾಥಮಿಕ ವರದಿ ಪ್ರಕಾರ ನಾಲ್ವರೂ ಕೇರಳ ರಾಜ್ಯದವರು ಎಂಬುದು ಗೊತ್ತಾಗಿದೆ. ಪೂರ್ಣ ವರದಿ ಬಂದ ಬಳಿಕ ಅವರ ಕುಟುಂಬದವರಿಗೆ ಸರ್ಕಾರದ ಮಟ್ಟದಲ್ಲಿ ನೀಡಬೇಕಾದ ಪರಿಹಾರ ಒದಗಿಸಲಾಗುವುದು ಎಂದರು.
ಮಂಗಳೂರು, ಉಡುಪಿ ಭಾಗದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಹಲವಾರು ಹಾನಿ ಸಂಭವಿಸಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಅಂತಹ ಸ್ಥಳಗಳಿಗೆ ತೆರಳಿ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. ಅಲ್ಲದೆ ಜನರಿಗೆ ಧೈರ್ಯ ತುಂಬುವ ಕೆಲಸವನ್ನೂ ಮಾಡುತ್ತಿದ್ದಾರೆ ಎಂದವರು ತಿಳಿಸಿದರು.
ಪ್ರಾಕೃತಿಕ ವಿಕೋಪ ಹಾಗೂ ಮಳೆ ಮುನ್ನೆಚ್ಚರಿಕೆ ಸಲುವಾಗಿ ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಚರ್ಚಿಸಲು ಇಂದು ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಕರೆಯಲಾಗಿದೆ. ಮುಂದಿನ 48 ಗಂಟೆಯಲ್ಲಿ ಸಂಭಾವ್ಯ ಮಳೆಯನ್ನು ಅಂದಾಜಿಸಿ ಆ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದರು.
ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ತಹಶೀಲ್ದಾರ್ ಸ್ಮಿತಾ ರಾಮ್ ಉಪಸ್ಥಿತರಿದ್ದರು.